ಬಾಗಲಕೋಟೆ/ಬೆಳಗಾವಿ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಚುನಾಯಿತ ಸದಸ್ಯರು ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ ಮತ್ತು ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಹಾಕುತ್ತಾರೆಂಬ ವಿಶ್ವಾಸವಿದೆ ಎಂದು ಜೆಡಿಎಸ್ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷದ ನಾಯಕರು ನಮ್ಮ ಪಕ್ಷದ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ನಿಜ. ನಮ್ಮ ಪಕ್ಷದ ಚುನಾಯಿತ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಇದು ರಾಜ್ಯಸಭಾ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ರಾಷ್ಟ್ರೀಯ ಪಕ್ಷಗಳ ಕೊಡುಗೆಗಳನ್ನು ಲೆಕ್ಕಿಸದೆ, ನಮ್ಮ ಪಕ್ಷದ ಶಾಸಕರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಎಸ್ಆರ್ ಪಾಟೀಲ್ ಅವರನ್ನು ಸಂಪರ್ಕಿಸಿರುವ ಕುರಿತ ವದಂತಿಗಳಿಗೆ ಪ್ರತಿಕ್ರಿಯೆ ನೀಡಿ, ನಾನು ಯಾರನ್ನೂ ಸಂಪರ್ಕಿಸಿಲ್ಲ. ಆದರೆ, ಪಾಟೀಲರನ್ನು ಕಾಂಗ್ರೆಸ್ ನಡೆಸಿಕೊಳ್ಳುತ್ತಿರುವ ರೀತಿ ನನಗೆ ಬೇಸರ ತರಿಸಿದೆ. ಪಾಟೀಲ್ ಅವರ ಮುಂದಿನ ನಿರ್ಧಾರಗಳ ಆಧಾರದ ಮೇಲೆ ಜೆಡಿಎಸ್ ಸೇರ್ಪಡೆ ಕುರಿತು ಅವರೊಂದಿಗೆ ಮಾತುಕತೆ ನಡೆಸುತ್ತೇವೆಂದು ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾಂಗ್ರೆಸ್ನ ಪ್ಯಾಂಟ್ ಅನ್ನು ಕೆಳಗಿಳಿಸಲಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಗೌರವದಿಂದ ಬದುಕುವ ವಾತಾವರಣವನ್ನು ನಿರ್ಮಿಸೋಣ ಎಂದು ತಿಳಿಸಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರತಿ ಮಸೀದಿಯಲ್ಲಿ ದೇವಸ್ಥಾನವನ್ನು ನೋಡಬಾರದು ಎಂದು ಹೇಳಿದ್ದಾರೆ. ಜನರು ಧಾರ್ಮಿಕ ಭಾವನೆಗಳ ಮೇಲೆ ಇತರರನ್ನು ಪ್ರಚೋದಿಸುತ್ತಿದ್ದಾರೆ. ಹೀಗಿದ್ದರೂ ಸರ್ಕಾರ ಏಕೆ ಮೌನವಾಗಿದೆ? ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಅವರು, ”ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎಂದು ಏಕೆ ಹೇಳುತ್ತಿದ್ದಾರೆ? ನಾವು ಒಮ್ಮೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೆವು. ಆದರೆ, ಅದಕ್ಕೆ ಕಾರಣ ಸಿದ್ದರಾಮಯ್ಯ. ಹಲವರಿಗೆ ಮೋಸ ಮಾಡಿದ್ದೇ ಸಿದ್ದರಾಮಯ್ಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಇನ್ನಷ್ಟು ಕುಸಿಯಲಿದೆ. ಕಾಂಗ್ರೆಸ್ ಅನ್ನು ಮುಗಿಸಲು ಜೆಡಿಎಸ್ ಅಥವಾ ಬಿಜೆಪಿಗೆ ಅಗತ್ಯವಿಲ್ಲ, ಅವರ ಪಕ್ಷದ ನಾಯಕರೇ ಅದನ್ನು ಮಾಡುತ್ತಾರೆಂದು ಹೇಳಿದ್ದಾರೆ.