ಬಾಗಲಕೋಟೆ: ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದ ಹಿಂಸಾಚಾರ ಹಾಗೂ ಮೂವರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 18 ಮಂದಿಯನ್ನು ಬಂಧಿಸಿದ್ದಾರೆ.
ಪರಿಸ್ಥಿತಿಯ ಮೇಲ್ವಿಚಾರಣೆಗಾಗಿ ಪಟ್ಟಣದಲ್ಲಿ ಬೀಡುಬಿಟ್ಟಿರುವ ಬಾಗಲಕೋಟೆ ಎಸ್ಪಿ ಜಯಪ್ರಕಾಶ್, ಹಳೆಯ ವೈಷಮ್ಯ ಮತ್ತು ಟೀಸಿಂಗ್ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಗುರುವಾರ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಂಚಿಕೊಳ್ಳುವುದರಿಂದ ದೂರವಿರುವಂತೆ ಅವರು ಜನರನ್ನು ವಿನಂತಿಸಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಇನ್ನೂ ೧೫ ಜನರಿಗಾಗಿ ಹುಡುಕಾಟ ಪ್ರಾರಂಭಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಎರಡೂ ಕಡೆಯ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಜಯಪ್ರಕಾಶ್ ತಿಳಿಸಿದ್ದಾರೆ.
ಹಿಂಸಾಚಾರದಲ್ಲಿ ಒಂದು ಬೈಕ್, ಒಂದು ಗಾಡಿ ಸುಟ್ಟು ಕರಕಲಾಗಿದ್ದರೆ, ಆರು ಬೈಕುಗಳು ಜಖಂಗೊಂಡಿವೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇಂಡಿಯನ್ ರಿಸರ್ವ್ಬೆ ಟಾಲಿಯನ್ (ಐಆರ್ಬಿ) ನ ಐದು ತುಕಡಿಗಳನ್ನು ಪಟ್ಟಣದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾಡಳಿತವು ಪಟ್ಟಣದಲ್ಲಿ ಶುಕ್ರವಾರ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅರುಣ ಕಟ್ಟಿಮನಿ ಮತ್ತು ಅವರ ಇಬ್ಬರು ಸ್ನೇಹಿತರು ಕೆರೂರು ಪಟ್ಟಣದ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಅರುಣ್ ಅವರ ಬೆನ್ನಿಗೆ ಇರಿದಿದ್ದಾರೆ. ಅವರ ತಲೆಯ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಯಿತು. ಅವರ ಸ್ನೇಹಿತರನ್ನೂ ದುಷ್ಕರ್ಮಿಗಳು ಇರಿದಿದ್ದಾರೆ. ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಉದ್ರಿಕ್ತ ಜನಸಮೂಹವು ತರಕಾರಿ ಮಾರುಕಟ್ಟೆಯ ಅಂಗಡಿಗೆ ಬೆಂಕಿ ಹಚ್ಚಿತು, ಬೈಕುಗಳು ಮತ್ತು ಅನೇಕ ತರಕಾರಿ ಗಾಡಿಗಳನ್ನು ಹಾನಿಗೊಳಿಸಿತು. ಹೆಚ್ಚಿನ ತನಿಖೆ ನಡೆಯುತ್ತಿದೆ.