ಬೆಳಗಾವಿ: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಮಳೆ ಅರ್ಭಟಿಸುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ನಾಲ್ಕು ದಿನಗಳಿಂದ ಭಾರಿ ಮಳೆ ಆಗ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಗ್ರಾಮಗಳು ಸಂಪರ್ಕ ಕಡಿದುಕೊಳ್ಳುವ ಭೀತಿಯಲ್ಲಿವೆ.
ತೂಗು ಸೇತುವೆ ಮೇಲೆ ಜನ ಜೀವ ಭಯದಲ್ಲಿ ಓಡಾಡುವಂತಾಗಿದೆ. ಖಾನಾಪುರ ಭಾಗದಲ್ಲಿ ವರುಣ ಅತೀ ಹೆಚ್ಚು ಆರ್ಭಟಿಸುತ್ತಿದ್ದಾನೆ. ಹೀಗಾಗಿ ಖಾನಾಪುರ ತಾಲೂಕಿನ ಶಾಲೆಗಳಿಗೆ ಇಂದು(ಜುಲೈ 22) ರಜೆ ಘೋಷಿಸಲಾಗಿದೆ.
ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ, ಲೋಂಡಾ, ಜಾಂಬೋಟಿ ಭಾಗದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಕಾಡಂಚಿನ ಮಕ್ಕಳು ಶಾಲೆಗೆ ತೆರಳಲು ಸಾಧ್ಯವಾಗದ ಹಿನ್ನೆಲೆ ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.