ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಇಂದಿನಿಂದ (ಸೆ.10) ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆರನೇ ಹಂತದ ಹೋರಾಟ ಆರಂಭವಾಗಲಿದೆ.
ಪಂಚಮಸಾಲಿ ಮೀಸಲಾತಿ ವಿಚಾರ ಕೋರ್ಟ್ನಲ್ಲಿರುವ ಹಿನ್ನೆಲೆಯಲ್ಲಿ ಕಾನೂನಿನ ತೊಡಕು ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸಭೆ ಕರೆದು ಚರ್ಚಿಸಲು ಸ್ವಾಮೀಜಿ ಒತ್ತಾಯಿಸಿದ್ದಾರೆ.
ಸುಮಾರು ಮೂವತ್ತನಾಲ್ಕು ವೀರಶೈವ ಲಿಂಗಾಯತ ಒಳಪಂಗಡಗಳು ಈಗಾಗಲೇ 2 ಎ ಮೀಸಲಾತಿ ಹಕ್ಕನ್ನು ಅನುಭವಿಸುತ್ತಿವೆ. ಆದರೆ ಕೃಷಿ ಮೂಲ ಕಸುಬು ಮಾಡುತ್ತಾ ಬಂದಿರುವ ಪಂಚಮಸಾಲಿಗಳಿಗೆ ಮೀಸಲಾತಿ ಸೌಲಭ್ಯ ಇಲ್ಲ. ಇದರಿಂದ ನಮ್ಮ ಮಕ್ಕಳ ಭವಿಷ್ಯಕ್ಕೆ ಅಡ್ಡಿ ಉಂಟಾಗುತ್ತಿದೆ. ಹೀಗಾಗಿ 3ಬಿ ಯಿಂದ 2ಎಗೆ ಸೇರಿಸಬೇಕು ಎಂದು ಹೋರಾಟಗಾರರ ವಾದವಾಗಿದೆ.