ಹುಬ್ಬಳ್ಳಿ: ಪಕ್ಷದ ಸಭೆಯಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಶಾಸಕ ಅರುಣಕುಮಾರ ಪೂಜಾರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ನಡುವೆ ಯಾವುದೇ ಜಟಾಪಟಿಯಾಗಿಲ್ಲ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆಯಷ್ಟೇ ಎಂದು ಶಾಸಕ ಜಗದೀಶ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಮಾಧ್ಯಮಗಳ ಜೊತೆ ಬುಧವಾರ ಮಾತನಾಡಿದ ಶೆಟ್ಟರ್, ‘ರಾಣೆಬೆನ್ನೂರು ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದು, ಅದಕ್ಕೆ ಸಂಬಂಧಿಸಿದಂತೆ ಪರಸ್ಪರರು ಚರ್ಚೆ ಮಾಡಿದ್ದಾರೆ. ಇಬ್ಬರೂ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಚುನಾವಣೆಯ ನಂತರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಮುಂದಾಳತ್ವದಲ್ಲಿ ಸಮಸ್ಯೆ ಪರಿಹರಿಸಲಾಗುವುದು’ ಎಂದರು.
ಇಬ್ಬರಲ್ಲಿ ಯಾರೂ ರಾಜೀನಾಮೆ ನೀಡುವ ಹಾಗೂ ಕೈ- ಕೈ ಮಿಲಾಯಿಸುವ ಹಂತಕ್ಕೆ ಹೋಗಿಲ್ಲ ಎಂದರು.
ನಿಮ್ಮ ಸಮ್ಮುಖದಲ್ಲಿಯೇ ಗಲಾಟೆ ಆಗಿದೆಯಲ್ಲ ಎನ್ನುವ ಪ್ರಶ್ನೆಗೆ ‘ರಾಜ್ಯ ಘಟಕದ ಅಧ್ಯಕ್ಷರು ನೋಡಿಕೊಳ್ಳುತ್ತಾರೆ’ ಎಂದರು.