ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾವನೆ ಹೈಕಮಾಂಡ ಮುಂದೆ ಇಲ್ಲ. ಸಿಎಂ ಬದಲಾವಣೆ ವಿಚಾರ ಬರಿ ಗಾಳಿ ಸುದ್ದಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದ ಖಾಸಗಿ ಹೊಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಗ್ರಾಮೀಣ ಅಭಿವೃದ್ಧಿ ಸಚಿವ ಈಶ್ವರಪ್ಪ ಅವರು ಕೂಡಾ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡಬಾರದೆಂದು ರಾಷ್ಟ್ರೀಯ ನಾಯಕರು ರಾಜ್ಯದ ನಾಯಕರಿಗೆ ಕಿವಿಮಾತು ಹೇಳಿದ್ದಾರೆ. ಆ ರೀತಿ ಹೇಳಿಕೆ ನೀಡುವುದು ಕೂಡಾ ತಪ್ಪು. ಮುಂದಿನ 2023 ರ ಚುನಾವಣೆವರೆಗೆ ಸಿಎಂ ಬದಲಾವಣೆ ಇಲ್ಲವೆಂದು ಅವರು ಸ್ಪಷ್ಟಪಡಿಸಿದರು.
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ವಿಷಯ ನನ್ನ ಗಮನಕ್ಕೆ ಇಲ್ಲ, ಈಗಾಗಲೇ ಬಿ.ಎಸ್.ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ನಾನು ಗಮನಿಸಿಲ್ಲ, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದಾಗ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಆಗಿಲ್ಲ ಎಂದು ತಿಳಿದಿದೆ. ಆದರೆ ಹಾಸನದಲ್ಲಿ ಐಐಟಿ ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದ್ದಾರೆಂದು ಹೇಳಿದರು.
40% ಪರ್ಸೆಂಟ್ ಆರೋಪ ಆಧಾರ ರಹಿತವಾಗಿದ್ದು,ಈ ಬಗ್ಗೆ ದಾಖಲೆಗಳಿದ್ದರೆ ಎಸಿಬಿ ಅಥವಾ ತನಿಖಾ ಸಂಸ್ಥೆಗಳಿಗೆ ದೂರು ನೀಡಲಿ ಎಂದು ಸವಾಲ್ ಹಾಕಿ, ಮೋದಿ ಅವರು ಈ ಹಿಂದೆ ಕಾಂಗ್ರೆಸ್ ವಿರೋಧ ಆರೋಪ ಮಾಡಿದಾಗ ಆಧಾರವಿದ್ದವು ಎಂದು ಸಮರ್ಥಿಸಿಕೊಂಡರು.