ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದ ಎಲ್ಲರನ್ನೂ ಬಂಧಿಸಲಾಗಿದೆ. ಅದರ ಹಿಂದಿರುವ ನಾಯಕರ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಜರಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಕುರಿತು ಗೃಹ ಸಚಿವರ ಗಮನಕ್ಕೆ ಬಂದ ಕೂಡಲೇ ನಿಷ್ಪಕ್ಷಪಾತ ತನಿಖೆಯಾಗಲು ಸಿಐಡಿಗೆ ವಹಿಸಲಾಗಿದೆ. ಪರೀಕ್ಷೆ ನಡೆದಿರುವ ಕೇಂದ್ರದಲ್ಲಿ ಸಮಸ್ಯೆಯಾಗಿದ್ದರೆ, ಅಧೀಕ್ಷಕರ ಮಟ್ಟದಲ್ಲಿ ಅಥವಾ ಮೇಲಾಧಿಕಾರಿಗಳ ಸಮಸ್ಯೆ ಇದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ನೀಡಲಾಗಿದೆ.
ಬೇರೆ ಪಕ್ಷದ ಸರಕಾರವಾಗಿದ್ದರೆ ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದರು. ನಾವು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಯಾರೇ ತಪ್ಪಿ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಪರೀಕ್ಷೆಗಳನ್ನು ಪುನಃ ಕೈಗೊಳ್ಳಲು ವಿದ್ಯಾರ್ಥಿಗಳು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಐಡಿ ಸಮಗ್ರ ವರದಿ ನೀಡಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.