ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಗೆ ಜಯ ಸಿಕ್ಕಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಿಜೆಪಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ಹಿಂದೂ ಸಂಘಟನೆಗಳು ನಿರಂತರ ಈದ್ಧಾ ಮೈದಾನದಲ್ಲಿ ಗಣೇಶ್ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಈಗ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದಾರೆ. ಮೂರು ದಿನಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ದು, 19,20,21 ರಂದು ಮೂರು ದಿನಗಳ ಕಾಲ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದ್ದಾರೆ. ಅನುಮತಿ ನೀಡುತ್ತಿದ್ದಂತೆ ಹೋರಾಟಗಾರರು ಜಯಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇನ್ನು, ಈದ್ಲಾ ಮೈದಾನದಲ್ಲಿ ಗಣೇಶ್ ಪ್ರತಿಷ್ಠಾಪನೆ ವಿರೋಧಿಸಿ 24 ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಕಳೆದ ವರ್ಷದಂತೆ ಈ ವರ್ಷವೂ ಅನುಮತಿ ನೀಡಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದವು. ಅಲ್ಲದೇ, ಅಂಜುಮನ್ ಇಸ್ಲಾಂ ಸಂಸ್ಥೆ ಧಾರವಾಡ ಹೈಕೋರ್ಟ್ಗೆ ಮೊರೆ ಹೋಗಿತ್ತು. ಇಂದು ಧಾರವಾಡ ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ.
ಸೆಪ್ಟೆಂಬರ್ 19 ರಂದು ಬೆಳಿಗ್ಗೆ 6 ಗಂಟೆಯಿಂದ 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. 30*30 ಅಳತೆಯ ಪೆಂಡಾಲ, ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಬಿತ್ತಿಪತ್ರ, ವಿವಾದಿತ ಫೋಟೋ ಪ್ರದರ್ಶನ ನಿಷೇಧ ಮಾಡಲಾಗಿದೆ. ಮನರಂಜನಾ ಕಾರ್ಯಕ್ರಮಗಳಿಗೂ ನಿಷೇಧ ವಿಧಿಸಲಾಗಿದೆ. ಅನಾವಶ್ಯಕ ಗಲಭೆ, ಗಲಾಟೆಗಳು ಆದ್ರೆ ಆಯೋಜಕರೆ ಹೊಣೆಯಾಗ್ತಾರೆ. ಅನ್ಯಧರ್ಮೀಯರಿಗೆ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ, ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ವಿಧಿಸಿ ಮಹಾನಗರ ಪಾಲಿಕೆ ಅನುಮತಿ ನೀಡಿದೆ.