ಹುಬ್ಬಳ್ಳಿ: ಮೂರು ದಶಕ ಹಿಂದೆ ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಬೆಳಿಗ್ಗೆ ಪ್ರತಿಭಟನೆ ಶುರುಮಾಡಿದ್ದಾರೆ. ಸಂಜೆ 4 ಗಂಟೆ ತನಕ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಭಟನಾ ಸ್ಥಳದಲ್ಲಿದ್ದು, ಅವರ ನೇತೃತ್ವದಲ್ಲೇ ಪ್ರತಿಭಟನೆ ನಡೆದಿದೆ. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಪರಿಸ್ಥಿತಿ ಕೈಮೀರಿ ಹೋಗದಂತೆ ನಿಗಾವಹಿಸಿದ್ದಾರೆ. ಆರ್. ಅಶೋಕ್ ಅವರ ಜತೆಗೆ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಎಂಎಲ್ಸಿ ಪ್ರದೀಪ್ ಶೆಟ್ಟರ ಸೇರಿ ಅನೇಕ ನಾಯಕರು ಭಾಗಿಯಾಗಿದ್ದಾರೆ.
ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಸಿದ್ಧವಾಗುತ್ತಿರುವಾಗಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಶಕಗಳ ಹಳೆಯ ಕೇಸ್ಗಳನ್ನು ಕೆದಕಿ ಬಂಧಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.