ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಧಾರವಾಡದ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿನಯ್ ಅವರ ಅಭಿಮಾನಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ವಿನಯ್ ಕುಲಕರ್ಣಿ ಅವರನ್ನೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು. ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಜೈಲುವಾಸ ಅನುಭವಿಸಿ ಬಂದು ಇದೀಗ ಜಾಮೀನಿನ ಮೇಲೆ ಹೊರಗಿರುವ ವಿನಯ್ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಸದ್ಯ ವಿಧಾನಸಭೆ ಚುನಾವಣೆ ಬಂದಿದ್ದು, ವಿನಯ್ ಅವರನ್ನು ಕಾಂಗ್ರೆಸ್ ಪಕ್ಷ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ವಿನಯ್ ಅವರ ನಿವಾಸದೆದುರು ಧರಣಿ ಆರಂಭಿಸಿದ್ದಾರೆ.
ವಿನಯ್ ಅವರು ಶಾಸಕರಿದ್ದಾಗ ಧಾರವಾಡ ಗ್ರಾಮಾಂತರ ಕ್ಷೇತ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಅನುದಾನ ತಂದು ಕೆಲಸ ಮಾಡಿಸಿದ್ದಾರೆ. ಪ್ರಸಕ್ತ ವರ್ಷ ಅವರ ಪರವಾಗಿಯೇ ಅಲೆ ಇದ್ದು, ಅವರು ಜಿಲ್ಲೆಯಿಂದ ಹೊರಗಿದ್ದರೂ ಚುನಾಯಿತರಾಗಿ ಬರುತ್ತಾರೆ. ಅವರಿಗೆ ಶಿಗ್ಗಾಂವಿ ಸೇರಿದಂತೆ ಬೇರೆ ಬೇರೆ ಕಡೆ ಟಿಕೆಟ್ ನೀಡದೇ ಅವರನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೇ ಪಕ್ಷ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಈ ಸನ್ನಿವೇಶವನ್ನು ಕಾಂಗ್ರೆಸ್ ಪಕ್ಷ ಯಾವ ರೀತಿ ನಿಭಾಯಿಸಿ, ವಿನಯ್ ಅವರನ್ನು ಯಾವ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತದೆಯೋ ಕಾದು ನೋಡಬೇಕಿದೆ.