ಧಾರವಾಡ: ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಸರಹದ್ದಿನ ವಿಶಾಲವಾದ ಪ್ರದೇಶದಲ್ಲಿ ನಿರ್ಮಾಣವಾಗಿ ನಿಂತಿರುವ ಐಐಟಿ ಕೇಂದ್ರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಮಾರ್ಚ್ 12 ರಂದು ಮಧ್ಯಾಹ್ನ ಈ ಐಐಟಿ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.
ಹೆಲಿಪ್ಯಾಡ್ ನಿರ್ಮಾಣ ಕೂಡ ಆಗಿದ್ದು, ಧಾರವಾಡ ಮೋದಿ ಅವರಿಗೆ ಸ್ವಾಗತ ಕೋರಲು ಸಜ್ಜುಗೊಂಡು ನಿಂತಿದೆ. ಈ ಕಾರ್ಯಕ್ರಮಕ್ಕೆ 1 ಲಕ್ಷಕ್ಕಿಂತಲೂ ಅಧಿಕ ಜನರನ್ನು ಸೇರಿಸುವ ಗುರಿಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ.
ಬೃಹತ್ ವೇದಿಕೆ ಹಾಗೂ ಆಸನಗಳ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ಕೂಡ ನಡೆಸಲಿದ್ದಾರೆ. ಒಟ್ಟಾರೆ ಐಐಟಿ ಕೇಂದ್ರ ಇದೀಗ ಮದುವಣಗಿತ್ತಿಯಂತೆ ಸಿಂಗಾರಗೊಂಡು ಉದ್ಘಾಟನೆಗಾಗಿ ಕಾಯುತ್ತಿದೆ.