ಧಾರವಾಡ: ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ವಾಣಿಜ್ಯೋದ್ಯಮ ಸಂಘದವರು ಇಂದು ಪ್ರತಿಭಟನೆಗೆ ಕರೆ ಕೊಟ್ಟಿದ್ದರು.
ಧಾರವಾಡದಲ್ಲಿ ಎಂದಿನಂತೆ ಅಂಗಡಿ, ಮುಂಗಟ್ಟುಗಳು ಕಾರ್ಯ ನಿರ್ವಹಿಸಿದವಾದರೂ ಕೆಲವೊಂದಿಷ್ಟು ಪ್ರದೇಶಗಳಲ್ಲಿ ಅಂಗಡಿಕಾರರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಧಾರವಾಡದ ಸುಭಾಷ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ವಾಣಿಜ್ಯೋದ್ಯಮ ಸಂಘದ ಸದಸ್ಯರು, ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು. ಸುಭಾಷ ರಸ್ತೆಯ ಮೂಲಕ ಆರಂಭವಾದ ಈ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಚೇಂಬರ್ ಆಫ್ ಕಾಮರ್ಸ್ನ ಸದಸ್ಯರು ಹಾಗೂ ಸಣ್ಣ ಕೈಗಾರಿಕೋದ್ಯಮಿಗಳು ಕೂಡ ಪಾಲ್ಗೊಂಡಿದ್ದರು. ಪ್ರತಿಭಟನಾ ರ್ಯಾಲಿ, ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಕ್ತಾಯಗೊಂಡಿತು. ಅಲ್ಲಿ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.