ಧಾರವಾಡ: ‘ಯಾವುದೇ ನಾಯಕರ ಮೇಲೆ ಮೊಟ್ಟೆ ಎಸೆಯುವುದು, ಕಪ್ಪು ಬಾವುಟ ಪ್ರದರ್ಶಿಸುವುದು ತಪ್ಪು. ನಾನು ಇದರ ಪರವಾಗಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಕೃತ್ಯ ಸಮರ್ಥನೀಯವಲ್ಲ. ಅವರು ಸಾವರ್ಕರ್ ಕುರಿತು ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ, ಸಾವರ್ಕರ್ ಕುರಿತು ವಿಶ್ವಾಸ ಹೊಂದಿರುವವರಿಗೆ ಅಪಮಾನ ಆಗುವ ರೀತಿಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಸರಿಯಲ್ಲ’ ಎಂದರು.
‘ಪ್ರತಿಭಟನೆ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಇರಬೇಕು. ಯಾರೂ ಲಕ್ಷ್ಮಣ ರೇಖೆ ದಾಟಬಾರದು. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಿದ್ದರಾಮಯ್ಯ ಅವರೂ ಇಂಥ ಕೃತ್ಯಗಳಿಗೆ ಪ್ರಚೋದನೆ ನೀಡುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಇಲ್ಲಿ ಪ್ರತಿಕ್ರಿಯಿಸಿದರು.
‘ವೀರ ಸಾವರ್ಕರ್ ಅವರನ್ನು ಟೀಕಿಸಿದರೆ, ಅವಹೇಳನಕಾರಿಯಾಗಿ ಮಾತನಾಡಿದರೆ ಮುಸ್ಲಿಮರ ಮತಗಳು ಸಿಗುತ್ತವೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ತೇಲುತ್ತಿದ್ದಾರೆ. ಅಲ್ಲದೇ, ನಕಲಿ ಗಾಂಧಿಗಳನ್ನು ಮೆಚ್ಚಿಸಲು ಅವರು ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ’ ಎಂದು ದೂರಿದರು.