ಹುಬ್ಬಳ್ಳಿ: ಇತ್ತೀಚೆಗೆ ತೆಲಂಗಾಣ ಪ್ರವಾಸಕ್ಕೆ ಹೋದಾಗ ಅಲ್ಲಿ ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆದು ಬಿಜೆಪಿ ಸೇರುತ್ತಿದ್ದಾರೆ. ಸಂಪೂರ್ಣವಾಗಿ ಕಾಂಗ್ರೆಸ್ ಅಸ್ತಿತ್ವವ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸಿಎಂ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಕನಸು ಯಾವತ್ತು ಸತ್ಯವಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.
ಮುಂಬರುವ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನಾಯಕರು ಸಿಎಂ ಸ್ಥಾನ ಪಡೆಯಲು ಏನೇ ಪ್ರಯತ್ನ ಮಾಡಿದರು ಆಗುವುದಿಲ್ಲ. ಬರುವಂತಹ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು.
ಕಾಂಗ್ರೆಸ್ 60-70 ವರ್ಷ ದೇಶದಲ್ಲಿ ಆಡಳಿತ ನಡೆಸಿದ್ದರು. ಸಿದ್ದರಾಮಯ್ಯ ಕೆಲವು ವರ್ಷದ ಹಿಂದೆ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ನಲ್ಲಿ ಬಹಳ ವರ್ಷದಿಂದ ಇದ್ದರೆ ಈ ಮಾತು ಹೇಳುತ್ತಿರಲಿಲ್ಲ. ಜನ ಸಂಖ್ಯೆ ಹೆಚ್ಚಾದಂತೆ ನಿರುದ್ಯೋಗ ಹೆಚ್ಚಾಗುತ್ತದೆ. ಪ್ರಧಾನಿ ಮೋದಿಯವರು ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಮೂಲಕ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರಾದ ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಇದ್ದಾಗ ಎಷ್ಟು ಜನರಿಗೆ ಉದ್ಯೋಗ ನೀಡಿದ್ದಾರೆ ಅವಲೋಕನ ಮಾಡಬೇಕು. ಅದನ್ನು ಬಿಟ್ಟು ವಿರೋಧ ಪಕ್ಷದ ನಾಯಕನಾಗಿದ್ದೇನೆ ಎಂದು ಟೀಕೆ ಮಾಡುವುದು ಸರಿಯಲ್ಲ ಎಂದರು.
ಸಿದ್ದರಾಮೋತ್ಸವ ಮಾಡುತ್ತಿರುವುದು ಅವರಿಗೆ ಬಿಟ್ಟ ವಿಚಾರವಾಗಿದೆ. ಅವರ ಪಕ್ಷದಲ್ಲಿ ಬಹಳ ಅಸಮಾಧಾನ ವ್ಯಕ್ತವಾಗುತ್ತಿದೆ. ಸಿದ್ದರಾಮಯ್ಯ ಆಧಾರ ರಹಿತ ಟೀಕೆ ನಿಲ್ಲಿಸಬೇಕು ಎಂದು ಹರಿಹಾಯ್ದರು.