ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣ ಮೂಲಕ ಅಭಿವೃದ್ಧಿಯ ಪ್ರಶ್ನೆಗಳನ್ನು ಮೊಟುಕುಗೊಳಿಸುವ ಹುನ್ನಾರ ನಡೆಸುತ್ತಿದೆ. ಕಳೆದ ಮೂರು ವರ್ಷದಲ್ಲಿ ಕರ್ನಾಟಕ ಕರಾಳ ಘಟನೆಗಳಿಗೆ ಸಾಕ್ಷಿಯಾಗಿದೆ. ಈ ಎಲ್ಲ ದೃಷ್ಟಿಯಿಂದ ಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ಪರ್ಯಾಯ ರಾಜಕಾರಣ ರೂಪಿಸಲು ಅಣಿಯಾಗುತ್ತಿದೆ ಎಂದು ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ತನ್ನದೇ ಆದ ಗತ ವೈಭವ ಇದೆ. ಆದರೆ ಬಿಜೆಪಿ ಸರ್ಕಾರ ಕತ್ತೆಗಳನ್ನು ಬಿಕರಿ ಮಾಡಿದಂತೆ 50 ಕೋಟಿ ರೂಪಾಯಿ ಕೊಟ್ಟು ಶಾಸಕರನ್ನು ಖರೀದಿಸಿ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದು ವ್ಯಾಪಕವಾಗಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಹರಿಹಾಯ್ದರು.
ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ ಬಿ.ಎಸ್ ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಶೇ. 10ರಷ್ಟು ಕಮಿಷನ್ ಬೇಡಿಕೆ ಇಟ್ಟಿದ್ದು ನಮ್ಮ ಮುಂದಿದೆ. ಮುಂದೆ ಸರ್ಕಾರದ ಯಾವುದೇ ಕಾಮಗಾರಿಯಲ್ಲಿ ಶೇ. 40 ಕಮಿಷನ್ ಕೊಡಬೇಕಾದ ದುರಂತ ಬಂದಿದೆ. ಹೀಗಾಗಿಯೇ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ನಾನು ಭ್ರಷ್ಟಾಚಾರ ಮಾಡುವುದಿಲ್ಲ, ಮಾಡಲು ಬಿಡುವುದಿಲ್ಲ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ. 40 ಕುರಿತು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರೇ ಸಾವಿರಾರು ಕೋಟಿ ಇದ್ದರೇ ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಗಬಹುದು ಎಂದು ಹೇಳಿರುವುದು ಬಿಜೆಪಿಯ ಭ್ರಷ್ಟಾಚಾರಕ್ಕೆ ಹಿಡಿದ ಕೈ ಕನ್ನಡಿ ಆಗಿದೆ. ಇದೇ ಮುಂದುವರೆದರೇ ರಾಷ್ಟ್ರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿ ಮತ್ತೊಂದು ಶ್ರೀಲಂಕಾ ಆಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಈ ಎಲ್ಲ ಜ್ವಲಂತ ಸಮಸ್ಯೆಗಳನ್ನು ಇಟ್ಟುಕೊಂಡು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸಜ್ಜುಗೊಂಡಿದ್ದು, 54 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧಾರ ಮಾಡಿದೆ. ಈಗಾಗಲೇ ಜನವರಿ 7 ರಂದು ಮೊದಲ ಪಟ್ಟಿ ಬಿಡುಗಡೆ ಮಾಡಿ 10 ಜನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಉಳಿದ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಈ ಬಾರಿ ರಾಜ್ಯದಲ್ಲಿ ಅಮೂಲಾಗ್ರ ಬದಲಾವಣೆ ಆಗಲಿದೆ ಎಂದರು.