ಧಾರವಾಡ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾಕ್ಕೆ ಚುನಾವಣೆ ನಡೆಸಬೇಕು ಎಂದು ಸೂಚನೆ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಪ್ರಸಕ್ತ ಆಡಳಿತ ಮಂಡಳಿ ಸದಸ್ಯರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
ಈ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾಕ್ಕೆ ಒಂದು ತಿಂಗಳೊಳಗಾಗಿ ಚುನಾವಣೆ ನಡೆಸಬೇಕು ಎಂದು ಆದೇಶಿಸಿತ್ತು. ಆದರೆ, ಈ ಆದೇಶ ಪ್ರಶ್ನಿಸಿ ಪ್ರಸಕ್ತ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಆಡಳಿತ ಮಂಡಳಿ ಕೆಲ ಸದಸ್ಯರು, ಈ ಚುನಾವಣೆಯೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣೆ ತಡೆ ಹಿಡಿಯಲಾಗುವುದಿಲ್ಲ. ಈ ಪ್ರಕರಣ ಹೈಕೋರ್ಟ್ ವಿಭಾಗೀಯ ಪೀಠದಲ್ಲಿದ್ದು, ಅಲ್ಲಿಯೇ ಬಗೆಹರಿಸಿಕೊಳ್ಳುವಂತೆ ಆದೇಶಿಸಿ, ಹಿಂದಿ ಪ್ರಚಾರ ಸಭಾ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸದೇ ತಿರಸ್ಕರಿಸಿದೆ.