ಹುಬ್ಬಳ್ಳಿ: ಪ್ರಸಿದ್ಧ ಸಿದ್ದಾರೂಢ ಮಠ, ಮೂರುಸಾವಿರ ಮಠ, ಶಿರೂರ ಪಾರ್ಕ್ ತದ್ರೂಪಿ ಅಯ್ಯಪ್ಪಸ್ವಾಮಿ ಮಂದಿರ, ಜೈನ ಮಂದಿರಗಳು, ವರೂರಿನ ನವಗ್ರಹ ತೀರ್ಥ, ಐತಿಹಾಸಿಕ ಉಣಕಲ್ಲ ಚಂದ್ರಮೌಳೇಶ್ವರ ದೇವಸ್ಥಾನ ಹೀಗೆ ಐತಿಹಾಸಿಕ ಹಾಗೂ ನವ್ಯ ಹಲವು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಂದ ಹೆಸರುವಾಸಿಯಾಗಿರುವ ಹುಬ್ಬಳ್ಳಿ -ಧಾರವಾಡ ಇದೀಗ ಮತ್ತೊಂದು ಭವ್ಯ ಮಂದಿರದ ಮೂಲಕ ಭಕ್ತರ ಸುಕ್ಷೇತ್ರವಾಗಿ ಹೊರಹೊಮ್ಮುತ್ತಿದೆ. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಗಳು ಮತ್ತು ಆರಾಧನಾ ಟ್ರಸ್ಟ್ ವತಿಯಿಂದ ಈ ಮೂಲಕ ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ ಡಾ. ವಿಜಯ ಸಂಕೇಶ್ವರ ಶಿವಶಕ್ತಿ ಧಾಮ ಉದ್ಘಾಟನೆ ಮಾಡಿದರು.
ಹುಬ್ಬಳ್ಳಿ ತಾಲೂಕಿನ ಪಾಲಿಕೊಪ್ಪ ಬಳಿ ಪುಣೆ – ಬೆಂಗಳೂರು ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಶಿವ ದೇವಸ್ಥಾನವು ಭಕ್ತಗಣವನ್ನು ಕೈಬೀಸಿ ಕರೆಯುತ್ತಿದೆ. ವಿಶಾಲವಾದ ದೇವಸ್ಥಾನ ಆವರಣದಲ್ಲಿ ಶಿವಾ, ಗಣೇಶ, ಪಾರ್ವತಿ ಹೀಗೆ ವಿವಿಧ ದೇಗುಲಗಳು ಇವೆ. ಆರಾಧನಾ ಟ್ರಸ್ಟ್ ವತಿಯಿಂದ ಡಾ.ವಿಜಯ ಸಂಕೇಶ್ವರ ನೇತೃತ್ವದಲ್ಲಿ, ಹುಬ್ಬಳ್ಳಿ ಹೊರವಲಯದಲ್ಲಿ ಆರೂವರೆ ಎಕರೆ ಜಮೀನಿನಲ್ಲಿ ಬೃಹತ್ ದೇವಾಲಯ ನಿರ್ಮಿಸಲಾಗಿದೆ. ಅತ್ಯಂತ ಸುಂದರ ಹಾಗೂ ಹಸಿರು ಉದ್ಯಾನದ ಮಧ್ಯೆ ತಲೆ ಎತ್ತಿರುವ ಈ ಮಂದಿರ ಆಹ್ಲಾದಕರ ವಾತಾವರಣದಲ್ಲಿ ಭಕ್ತರಿಗೆ ತಂಪೆರೆಯುವುದರಲ್ಲಿ ಎರಡು ಮಾತಿಲ್ಲ.