ಧಾರವಾಡ: ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್ ಅನುಮತಿ ಮೇರೆಗೆ ಮಂಗಳವಾರ ಧಾರವಾಡಕ್ಕೆ ಪ್ರವೇಶಿಸಿ ಮತ ಚಲಾಯಿಸಿದರು. ನಗರದ ಸಪ್ತಾಪುರದ ಶಾರದಾ ಪದವಿಪೂರ್ವ ವಿದ್ಯಾಲಯದ ಮತಗಟ್ಟೆ 75ರಲ್ಲಿ ಅವರು ಮತ ಚಲಾಯಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ.
ಹೀಗಿದ್ದರೂ ವಿನಯ್ ಕುಲಕರ್ಣಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಚುನಾವಣೆ ಬಳಿಕ ಹಲವು ಬಾರಿ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸುತ್ತಲೇ ಬಂದಿದ್ದರೂ ನ್ಯಾಯಾಲಯ ಮಾತ್ರ ಅವರ ಅರ್ಜಿಯನ್ನು ತಿರಸ್ಕರಿಸುತ್ತಲೇ ಬಂದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡುವ ಸಲುವಾಗಿ ಧಾರವಾಡಕ್ಕೆ ಹೋಗಲು ಅವಕಾಶ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಲಯ ಕೂಡ ಅವರ ಅರ್ಜಿ ತಿರಸ್ಕರಿಸಿದ ಕಾರಣ ಅವರು ಬೆಂಗಳೂರಿನ ಹೈಕೋರ್ಟ್ ಮೊರೆ ಹೋಗಿದ್ದರು.
ವಿನಯ್ ಕುಲಕರ್ಣಿ ಮನವಿಗೆ ಸ್ಪಂದಿಸಿದ ಹೈಕೋರ್ಟ್, ಲೋಕಸಭಾ ಚುನಾವಣೆಗೆ ಮತದಾನ ಮಾಡಿ ಬರಬಹುದು. ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಕೂಡಲೇ ಧಾರವಾಡ ಬಿಟ್ಟು ಮತ್ತೆ ಹೊರಡಬೇಕು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಸಪ್ತಾಪುರದಲ್ಲಿರುವ ಶಾರದಾ ಸ್ಕೂಲ್ನ ಮತಗಟ್ಟೆ 75ಕ್ಕೆ ಪತ್ನಿ ಶಿವಲೀಲಾ ಹಾಗೂ ಪುತ್ರಿ ವೈಶಾಲಿ ಜೊತೆ ಬಂದ ವಿನಯ್ ಕುಲಕರ್ಣಿ ತಮ್ಮ ಹಕ್ಕು ಚಲಾಯಿಸಿ ಮತ್ತೆ ಅಲ್ಲಿಂದ ತೆರಳಿದ್ದಾರೆ.