ಧಾರವಾಡ : ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಜಾಗೃತಿ ಚಟುವಟಿಕೆಗಳು ದಿನೇ ದಿನೇ ರಂಗು ಪಡೆಯುತ್ತಿವೆ. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಹಾಗೂ ಹೊಸದಾಗಿ ಮತದಾನಕ್ಕೆ ಅರ್ಹತೆ ಪಡೆದುಕೊಂಡಿರುವ ಯುವ ಜನರನ್ನು ಮತದಾನಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ ನಡೆಸುತ್ತಿರುವ ವಿಶಿಷ್ಟ ಆಕರ್ಷಣೀಯ ಕಾರ್ಯಕ್ರಮಗಳು ಚುನಾವಣಾ ಹಬ್ಬದ ವಾತಾವರಣ ನಿರ್ಮಿಸುತ್ತಿವೆ. ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಮೆಹಂದಿ ಕಾರ್ಯಾಗಾರ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿತ್ತು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆಯಾಗಿರುವ ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ. ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧಾರವಾಡ ನಗರದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮೆಹಂದಿ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಡಿಎಚ್ಓ. ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ಉಪಸ್ಥಿತರಿದ್ದರು.