ಧಾರವಾಡ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಕಳೆದ ಚುನಾವಣೆಯಲ್ಲಿ ಶೇ.65 ಮಾತ್ರ ಮತದಾನವಾಗಿದ್ದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಸ್ವರೂಪ ಟಿ.ಕೆ ಅವರು ಅಳಗವಾಡಿ ಗ್ರಾಮಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದರು.
ನಂತರ ಮಾತನಾಡಿದ ಅವರು, ಮತದಾನ ನಮ್ಮೆಲ್ಲರ ಹಕ್ಕು. ನಮ್ಮ ಹಕ್ಕನ್ನು ನಾವು ಚಲಾಯಿಸದಿದ್ದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬರಲಿದೆ. ಈ ದಿಸೆಯಲ್ಲಿ ಪ್ರತಿ ಪ್ರಜೆಯೂ ಹಕ್ಕು ಚಲಾಯಿಸಲು ಶಪಥ ಮಾಡಬೇಕು ಎಂದು ಸಲಹೆ ನೀಡಿದರು. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ಕಡ್ಡಾಯ ಮತದಾನ ಮಾಡುವ ಘೋಷಣೆ ಮೂಲಕ ಜಾಗೃತಿ ಮೂಡಿಸಲಾಯಿತು. ತಾಪಂ ಇಒ ರಾಜೇಶ ಧನವಾಡ್ಕರ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾಗನೂರ ಇತರರು ಇದ್ದರು.