ಗದಗ : ಕೆ. ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗ ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೃತ ಸಂತೋಷ್ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂಬ ಬೇಡಿಕೆಗಳು ಬರುತ್ತಿದ್ದು, ಪರಿಹಾರ ನೀಡುವ ಬಗ್ಗೆ ಯೋಚಿಸುವುದಾಗಿ ತಿಳಿಸಿದರು.
ಈಶ್ವರಪ್ಪ ಅವರ ಬಂಧನಕ್ಕೆ ಪಟ್ಟು ಹಿಡಿದಿರುವ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ ಮುಖ್ಯಮಂತ್ರಿ, ಬಂಧನದ ಬಗ್ಗೆ ತನಿಖಾಧಿಕಾರಿಗಳು ತೀರ್ಮಾನಿಸುತ್ತಾರೆ. ಈ ಹಿಂದೆ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್ ನಲ್ಲಿ ಕೆ. ಜೆ. ಜಾರ್ಚ್ ಅವರನ್ನು ಬಂಧಿಸಲಿಲ್ಲ. ರಾಜ್ಯ ಪೊಲೀಸ್ ಆಗಲಿ, ಸಿಬಿಐ ಅಧಿಕಾರಿಗಳು ಕೂಡಾ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ಕಾಂಗ್ರೆಸ್ ನವರಿಗೆ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಪ್ರಕರಣದ ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರುವವರೆಗೂ ಸುಮ್ಮನಿರಬೇಕು. ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ಎರಡು ದಿನಗಳ ಹಿಂದೆಯೇ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದರು. ಆದರೆ, ಸಮಾಜದ, ಪಕ್ಷದ ಹಿರಿಯರಿಗೆ ಇರಿಸುಮುರಿಸು ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ಅವರು ತಿಳಿಸಿದರು.