ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ “ತೆರಿಗೆ ಭಯೋತ್ಪಾದನೆ” ಹೇಳಿಕೆಗೆ ಮಾಜಿ ಮುಖ್ಯಮಂತ್ರಿಯೂ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಯಾವಾಗಲೂ ಕಾಂಗ್ರೆಸ್ ಪಕ್ಷ ಬ್ಲ್ಯಾಕ್ ಮನಿಗೆ ಉತ್ತೇಜನ ನೀಡಿದೆ, ಕಾಂಗ್ರೆಸ್ ಅಕ್ರಮವಾಗಿ 600 ಕೋಟಿ ರೂಪಾಯಿ ಸಂಗ್ರಹಿಸಿದೆ. ಇದನ್ನು ಪ್ರಶ್ನೆ ಮಾಡಬಾರದು ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ಗೆ ಐಟಿ ನೋಟಿಸ್ ಆರ್ಥಿಕ ಭಯೋತ್ಪಾದನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಗದಗದಲ್ಲಿ ಮಾತನಾಡಿದ ಅವರು, ಕಾನೂನು ಪ್ರಕಾರ ಇದ್ದರೆ ಕಾಂಗ್ರೆಸ್ ನಾಯಕರಿಗೆ ಭಯ ಯಾಕೆ? ಕಾನೂನು ವಿರುದ್ಧ ಮಾಡಿದಾಗ ಮಾತ್ರ ಭಯ ಇರುತ್ತದೆ ಎಂದರು.
ಅಲ್ಲದೆ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ನೋಟಿಸ್ ಕೊಟ್ಟರೂ ಇವರು ಉತ್ತರ ಕೊಟ್ಟಿಲ್ಲ ಎಂದರು.
ಐಟಿ ನೋಟಿಸ್ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದ ಸಿದ್ದರಾಮಯ್ಯ ಅವರು, ತೆರಿಗೆ ಭಯೋತ್ಪಾದನೆ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ.
ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದಿದ್ದರು.