ಹಾವೇರಿ: ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ತಜ್ಞರ ಜತೆ ಸಭೆ ನಡೆಸಿ 1 ರಿಂದ 5ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ ತಿಳಿಸಿದರು.
ಭಾನುವಾರ ತಾಲ್ಲೂಕಿನ ಸುಕ್ಷೇತ್ರ ದೇವರಗುಡ್ಡ ಮಾಲತೇಶ ದೇವರ ದರ್ಶನದ ಬಳಿಕ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ಕಿಟ್ ವಿತರಿಸಿ ಅವರು ಮಾತನಾಡಿದರು.
ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಉತ್ಸುಕರಾಗಿದ್ದಾರೆ ಎಂದರು.