ವಿಜಯಪುರ : ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಂಧನಕ್ಕೊಳಗಾದ ಆರೋಪಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಿನ್ನೆ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಆದರೆ, ಇಂದು ನಸುಕಿನ ವೇಳೆ ಆತ ಪೊಲೀಸ್ ಠಾಣೆಯ ಶೌಚಾಲಯದಲ್ಲೇ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ನಂತರ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಗೆ ತಂದ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಿದ್ದಾರೆ.
ಆದರೆ, ಈ ನಡುವೆ ಠಾಣೆಗೆ ಮುತ್ತಿಗೆ ಹಾಕಿದ ಪೋಷಕರು ಹಾಗೂ ಸಂಬಂಧಿಗಳು ಮಾತ್ರ ಯಾರ ಸಮಜಾಯಿಷಿಗೂ ಜಗ್ಗದೇ ಪೊಲೀಸರ ವಿರುದ್ಧ ಹರಿಹಾಯ್ದಿದ್ದು, ನಿಮ್ಮ ನಿರ್ಲಕ್ಷ್ಯದಿಂದಲೇ ಯುವಕನ ಸಾವಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ನಸುಕಿನ ಜಾವ ಶೌಚಾಲಯಕ್ಕೆ ತೆರಳಿದ್ದ ಆರೋಪಿ ಅಲ್ಲಿ ನೇಣು ಹಾಕಿಕೊಂಡಿದ್ದಾನೆ. ಇದನ್ನು ಕಂಡ ಪೊಲೀಸ್ ಸಿಬ್ಬಂದಿ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ.
ಮೃತನ ಪೋಷಕರು ಹಾಗೂ ಸಂಬಂಧಿಕರಿಂದ ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂಥ ಘಟನೆಯಿಂದ ಸಹಜವಾಗಿ ಮನೆಯವರಿಗೆ ನೋವಾಗುತ್ತದೆ. ಆದರೆ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ವಿಜಯಪುರ ನಗರದಲ್ಲಿ ಎಸ್ಪಿ ಆನಂದಕುಮಾರ ಹೇಳಿಕೆ ನೀಡಿದ್ದಾರೆ.