ವಿಜಯಪುರ : ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿಯ ಲಾಲಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಮಿ ಅವರು ಗಂಗಾ ಪೂಜೆ ನೆರವೇರಿಸಿ ನಂತರ ಬಾಗಿನ ಅರ್ಪಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ವಿಜಯಪುರ-ಬಾಗಲಕೋಟೆ ಜಿಲ್ಲೆಗಳು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಂತೆ ರಾಜ್ಯದ ಗಡಿ ಅಂಚಿನಲ್ಲಿರುವ ಎಲ್ಲ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಅಮೃತ ಯೋಜನೆ ಜಾರಿಗೊಳಿಸಲು ಕ್ಯಾಬಿನೆಟ್ನಲ್ಲಿ ಅನುಮೋದನೆ ಪಡೆಯಲಾಗಿದೆ. ಇದಲ್ಲದೇ ಈ ಭಾಗದ ಗ್ರಾಮೀಣ ರಸ್ತೆಗಳು ಪ್ರವಾಹದಿಂದ ಹಾಗೂ ಮಳೆಯಿಂದಾದ ಹಾನಿ ಬಗ್ಗೆ ಅನೇಕರು ದೂರು ಬಂದಿದ್ದರಿಂದ ದುರಸ್ಥಿಗೆ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದರು.
ಯುಕೆಪಿಯ ಯೋಜನೆಗಳಿಂದ ಪುನರ್ರ್ವಸತಿ ಮತ್ತು ಪುನರ್ ನಿರ್ಮಾಣದ ಅಭಿವೃದ್ದಿಗೆ ಇನ್ನಷ್ಟು ಕೆಲಸಗಳು ಆಗಬೇಕಾಗಿದ್ದು, ಇದಕ್ಕಾಗಿ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಚಿಂತನೆ ನಡೆದಿದ್ದು, ಈ ಭಾಗದ ಜನಪ್ರತಿನಿಧಿಗಳು, ತಜ್ಞರ, ಅಧಿಕಾರಿಗಳ ಸಭೆ ನಡೆಸಿ ಅಭಿಪ್ರಾಯ ಪಡೆದು ಕ್ರಮವಹಿಸಲಾಗುವುದೆಂದರು. ರಾಜ್ಯದಲ್ಲಿಯೇ ಯುಕೆಪಿ ಬಹುದೊಡ್ಡ ನೀರಾವರಿ ಯೋಜನೆಯಾಗಿದ್ದು, ಈ ಯೋಜನೆಯಡಿ 5.60 ಲಕ್ಷ ಹೆಕ್ಟೇರ್ ನೀರಾವರಿಗೆ ಒಳಪಡಲಿದೆ. ಯುಕೆಪಿ ಎರಡನೇ ಯೋಜನೆಯಲ್ಲಿ ಕೆಲವೊಂದು ವಿಸ್ತ್ರøತ ಯೋಜನೆಗಳನ್ನು ಸಹ ಸೇರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದ ಗಡಿ ಜಿಲ್ಲೆಗಳಾಗಿರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಕೊರೊನಾ ಸ್ಥಿತಿಗತಿಗಳ ಕುರಿತು ಗಮನದಲ್ಲಿಟ್ಟುಕೊಂಡು ಕಠಿಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಇದರಿಂದ ಕೊರೊನಾ ಬಹತೇಕವಾಗಿ ನಿಯಂತ್ರಣದಲ್ಲಿರುತ್ತದೆ. ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು 2ನೇ ಅಲೆಯಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿ ಜನರಿಗೆ ಚಿಕಿತ್ಸೆಯಿಂದ ನೀಡಿ ಎಲ್ಲ ರೀತಿಯ ಆರೋಗ್ಯ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಅವಳಿ ಜಿಲ್ಲೆಗಳಲ್ಲಿ ಪ್ರತಿ ದಿನ 25 ಸಾವಿರ ಲಸಿಕೆಗೆ ಬೇಡಿಕೆ ಇಟ್ಟಿದ್ದು, ಲಸಿಕೆ ಒದಗಿಸುವ ಕ್ರಮಕೈಗೊಳ್ಳಲಾಗುವುದೆಂದರು.ಬ್ಲಾಕ್ ಫಂಗಸ್ ಸಂಪೂರ್ಣ ಗುಣಮುಖವಾಗುವವರೆಗೆ ಸರಕಾರದಿಂದಲೇ ವೆಚ್ಚ ಭರಿಸಲಾಗುತ್ತಿದೆ. ತಜ್ಞರ ಅಭಿಪ್ರಾಯದಂತೆ ಬರುವ 3ನೇ ಅಲೆಗೆ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದ್ದು, ಜಿಲ್ಲಾ ಆಸ್ಪತ್ರೆಗಳಲ್ಲಿರುವ ಐ.ಸಿ.ಯು ಬೆಡ್ಗಳ ಸಂಖ್ಯೆಯನ್ನು ಮಕ್ಕಳಿಗಾಗಿ ಮೀಸಲಿರುಸಲು ಸೂಚನೆ ನೀಡಲಾಗಿದೆ. ಅಪೌಷ್ಠಿಕತೆ ಮತ್ತು ವಿವಿಧ ರೋಗದಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಇತರರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.