ವಿಜಯಪುರ: ಸಿಂದಗಿ ಹಾಗೂ ಹಾನಗಲ್ ಎರಡೂ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಸಿಂದಗಿ ಉಪ ಚುನಾವಣೆ ಹಿನ್ನೆಲೆ ತಾಂಬಾ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಗುರುವಾರ ಹಮ್ಮಿಕೊಂಡ ಬೃಹತ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ನಿರೀಕ್ಷೆಗೂ ಮೀರಿ ಸಿಂದಗಿಯಲ್ಲಿ ಸಾರ್ವಜನಿಕರು ಮೆರವಣಿಗೆಯಲ್ಲಿ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಹಿಂದೇಂದು ಕಾಣದಂತಹ ಜನ ಬೆಂಬಲ ಕಾಣಸಿಗುತ್ತಿದೆ. ಮತದಾರರು ಭಾರತೀಯ ಜನತಾ ಪಕ್ಷದ ಪರವಾಗಿ ಇದ್ದಾರೆ. ಸಿಂದಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸುವುದರಲ್ಲಿ ಸಂದೇಹವಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡುತ್ತಿರುವ ಕೆಲಸದ ಆಧಾರದ ಮೇಲೆ ಜನರು ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ ಎಂದರು.
ಆರ್ ಎಸ್ ಎಸ್ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡಿದರೆ ಅವರ ಗೌರವ ಕಡಿಮೆ ಆಗತ್ತದೆಯೇ ಹೊರತು ಆರ್ ಎಸ್ ಎಸ್ ನದ್ದು ಅಲ್ಲ. ಈ ದೇಶದ ರಾಷ್ಟ್ರಪತಿ ಅವರು ಸಹಿತ ಆರ್ ಎಸ್ ಎಸ್ ನಿಂದ ಬಂದವರು. ಪ್ರಧಾನಿ ಮೋದಿ ಹಾಗೂ ನಾನು ಸಹಿತ ಆರ್ ಎಸ್ ಎಸ್ ನಿಂದ ಬಂದವರು ಎಂದರು.
ನನ್ನ ರಾಜಕೀಯ ಜೀವನದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ ಬಂಧುಗಳಿಗೆ ಅನ್ಯಾಯ ಮಾಡುವ ಕೆಲಸ ಮಾಡಿಲ್ಲ. ನಾವು ಅಥವಾ ಪ್ರಧಾನಿ ಮೋದಿಯವರು ಹಿಂದುಗಳಿಗೆ ಕೊಟ್ಟು, ಅಲ್ಪ ಸಂಖ್ಯಾತರಿಗೆ ಕೊಡದೇ ಇರುವ ಯಾವುದಾದರೂ ಒಂದು ಕಾರ್ಯಕ್ರಮ ಇದ್ದರೆ ತೋರಿಸಿ ಎಂದರು.
ಪ್ರಧಾನಿ ಮೋದಿಯವರಾಗಲಿ, ನಾವಾಗಲಿ ಎಲ್ಲ ಕಾಲದಲ್ಲೂ ಎಲ್ಲ ಯೋಜನೆಗಳನ್ನು ಹಿಂದು ಮುಸ್ಲಿಂ ಕ್ರೈಸ್ತ ರೆಂದು ಭೇದ ಭಾವ ಮಾಡದೇ ಕೊಟ್ಟಿದ್ದೇವೆ ಎಂದು ಹೇಳಿದರು.
ಈ ಕಾರ್ಯಕ್ರಮದ ಫಲವಾಗಿಯೇ ಇಂದು ದೇಶದಲ್ಲಿ ಬಿಜೆಪಿಯ ಪರವಾಗಿ ಜನರ ಒಲವಿದೆ ಎಂದ ಯಡಿಯೂರಪ್ಪ. ಅ. 30 ನೇ ತಾರಿಖು ಚುನಾವಣೆ ಮುಗಿದ ಬಳಿಕ ರಾಜ್ಯದ್ಯಂತ ಸಂಚರಿಸುವೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನ ಮಾಡುವೆ ಎಂದರು.
ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ, ಸಚಿವರಾದ ಜಗದೀಶ ಶೆಟ್ಟರ್, ಗೋವಿಂದ ಕಾರಜೋಳ, ಎಂಟಿಬಿ ನಾಗರಾಜ, ವಿ.ಸೋಮಣ್ಣ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಿಗಮ ಮಂಡಳಿ ಅಧ್ಯಕ್ಷ ವಿಜುಗೌಡ ಪಾಟೀಲ, ಎಸ್.ಕೆ.ಬೆಳ್ಳುಬ್ಬಿ ಇದ್ದರು.