ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಎಂದು ಹೇಳಿದರು.
ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ಧವಿದೆ, ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ ಇದೆ ಎಂದರು.
ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ಹೇಳಿದರು.