ವಿಜಯಪುರ :ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ.
ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಪ್ರಚಾರಕ್ಕೆ ಮೆರುಗು ನೀಡಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಮಾಹಿತಿ ನೀಡಿದರು.
ಏ.29 ರಂದು ಬೆಳಿಗ್ಗೆ 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿವಿ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅವಳಿ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಬಲ ತುಂಬಲಿದ್ದಾರೆ.
ಅವಳಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ.ಗದ್ದಿಗೌಡರ ಸೇರಿದಂತೆ ಅನೇಕ ಭಾಜಪ ಹಾಗೂ ಜೆಡಿಎಸ್ ಪ್ರಮುಖರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಇನ್ನೂ ಎಲ್ಲೆಡೆ ಚುನಾವಣಾ ಕಾವು ಜೋರಾಗಿದ್ದು, ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಜನರಿಂದ ಬಿಜೆಪಿ ಪರ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ. ವಿಕಸಿತ ಭಾರತ ಸಂಕಲ್ಪ ಸಾಕಾರಗೊಳಿಸಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ.
ಈ ಸಭೆಗೆ ವಿಜಯಪುರ ಜಿಲ್ಲೆಯಿಂದ ಸುಮಾರು 25-30 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ. ಜಿಲ್ಲೆ ಎಲ್ಲಾ ಕಾರ್ಯಕರ್ತರು, ಬಿಜೆಪಿ ಬೆಂಬಲಿಗರು, ಮೋದಿಯವರ ಹಿತೈಸಿಗಳು ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆರ್.ಎಸ್.ಪಾಟೀಲ್ ಕುಚಬಾಳ ಮನವಿ ಮಾಡಿಕೊಂಡರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಸಂಜಯ ಪಾಟೀಲ ಕನಮಡಿ, ಜಿಲ್ಲಾ ಕೋಶಾಧ್ಯಕ್ಷ ಭೀಮಾಶಂಕರ ಹದನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಸಾಬೂ ಮಾಶ್ಯಾಳ, ಮಹಿಳಾ ಮುಖಂಡರಾದ ಮಲ್ಲಮ್ಮ ಜೋಗೂರ, ಮಾಧ್ಯಮ ಪ್ರಮುಖ ವಿಜಯ್ ಜೋಶಿ ಉಪಸ್ಥಿತರಿದ್ದರು.