ವಿಜಯಪುರ: ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ, ಬಾಗಲಕೋಟೆ ಜಿಲ್ಲೆಯವರೇ ಆದ ಎಸ್.ಆರ್.ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಇದೆ ಎಂಬ ವದಂತಿ ಹಿನ್ನೆಲೆಯಲ್ಲಿ ಹೈಕಮಾಂಡ್ ನಡೆ ವಿರೋಧಿಸಿ ಕಾಂಗ್ರೆಸ್ ನ ಒಂಬತ್ತು ಮಂದಿ ಟಿಕೆಟ್ ಆಕಾಂಕ್ಷಿಗಳು ಒಗ್ಗೂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ದುಡಿಯುತ್ತಿದ್ದೇವೆ.ಒಂಬತ್ತು ಆಕಾಂಕ್ಷಿಗಳ ಪೈಕಿ ಯಾರಿಗಾದರೂ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಆದರೆ ಜಿಲ್ಲೆಯಿಂದ ಹೊರಗಿರುವ ಯಾವುದೇ ವ್ಯಕ್ತಿಗೆ ಪಕ್ಷ ಟಿಕೆಟ್ ನೀಡುವುದಕ್ಕೆ ನಮ್ಮ ವಿರೋಧ ಇದೆ” ಎಂದು ಡಾ.ಪ್ರಭುಗೌಡ ಪಾಟೀಲ ಹೇಳಿದರು.
ಎಸ್.ಆರ್.ಪಾಟೀಲ್ ಅವರಿಗೆ ಟಿಕೆಟ್ ನೀಡಲು ಪಕ್ಷ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸುದ್ದಿಯು ನಮ್ಮೆಲ್ಲರನ್ನು ದಿಗ್ಭ್ರಮೆಗೊಳಿಸಿದೆ ಮತ್ತು ಅಸಮಾಧಾನಗೊಳಿಸಿದೆ ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ.
ಮತ್ತೊಬ್ಬ ಟಿಕೇಟ್ ಆಕಾಂಕ್ಷಿ ಆನಂದಗೌಡ ದೊಡ್ಮನಿ ಮಾತನಾಡಿ, ಒಂಬತ್ತು ಜನ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಪ್ರವಾಸ ಮಾಡಿ ಪಕ್ಷ ಕಟ್ಟುತ್ತಿದ್ದಾರೆ.
ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನ ಸೇರಿದ್ದ ಪ್ರಜಾಧ್ವನಿ ಕಾರ್ಯಕ್ರಮವನ್ನೂ ಆಯೋಜಿಸಿದ್ದೇವೆ. ನಾವು ಪಕ್ಷಕ್ಕಾಗಿ ದುಡಿಯುತ್ತಿರುವುದರಿಂದ ಏಕಾಏಕಿ ನಮಗೆ ಟಿಕೆಟ್ ನಿರಾಕರಿಸಿ ಹೊರಗಿನವರಿಗೆ ಟಿಕೆಟ್ ನೀಡುವುದು ಸೂಕ್ತವಲ್ಲ ಎಂದರು.
ಹೊರಗಿನವರಿಗೆ ಟಿಕೆಟ್ ನೀಡಿದರೆ ದೇವರಹಿಪ್ಪರಗಿ ಕ್ಷೇತ್ರದಿಂದ ಪಕ್ಷ ಕೈತಪ್ಪುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.