ನೆಲಮಂಗಲ: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲಾ ಕಾಲೇಜು ಆರಂಭ ಹಿನ್ನೆಲೆ ಆಗಸ್ಟ್ 23ರ ಒಳಗೆ ರಾಜ್ಯದ ಎಲ್ಲಾ ಶಿಕ್ಷಕರಿಗೆ ಬಿಇಒ ಕಚೇರಿಗಳಲ್ಲಿ ವ್ಯಾಕ್ಸಿನ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯ ಪಡೆದುಕೊಂಡು ಶಾಲಾ ಆರಂಭ ಮಾಡಲಾಗುತ್ತಿದೆ. ಕೊರೊನಾ ಮುಂದಿನ ದಿನಗಳಲ್ಲಿ ಜೀವನದ ಒಂದು ಭಾಗ ಆಗುತ್ತದೆ ಮತ್ತು ಅದರ ಜೊತೆಗೆ ಬದುಕು ಕಲಿಯಬೇಕು ಎಂದರು.
ಕಳೆದ ಒಂದೂವರೆ ವರ್ಷದಿಂದ ಮಕ್ಕಳ ಶಿಕ್ಷಣ ಹೋಗಿರುವುದು ಎಲ್ಲರಿಗೂ ಗೊತ್ತಿದೆ. ಅಲ್ಲದೇ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿತ್ತು. ಹಾಗಾಗಿ ತಜ್ಞರ ಅಭಿಪ್ರಾಯ ಪಡೆದು 9,10,11,12 ನೇ ತರಗತಿಗಳು ಪ್ರಾರಂಭ ಮಾಡುತ್ತಿದ್ದೇವೆ. ಹಾಗಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.
ಕೊರೊನಾದಿಂದಾಗಿ ಮಕ್ಕಳ ಮೇಲಿನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಕಳೆದ ಒಂದೂವರೆ ವರ್ಷದಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದಿದ್ದು, ರಾಜ್ಯದಲ್ಲಿ ಇದೀಗ ಮತ್ತೆ ಶಾಲೆಗಳನ್ನು ಪುನಾರಂಭಿಸುವುದಾಗಿ ಸರ್ಕಾರ ತಿಳಿಸಿದೆ.