ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶೀಘ್ರದಲ್ಲೇ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಹೇಳಿದ್ದಾರೆ. ಆಸಕ್ತ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆದಷ್ಟು ಬೇಗ ಪರೀಕ್ಷೆ ನಡೆಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
2022ನೇ ಶೈಕ್ಷಣಿಕ ಸಾಲಿನಲ್ಲಿ ಆಯಾ ರಾಜ್ಯ ಸರ್ಕಾರಗಳು ಗುರುತಿಸಿರುವ ರಾಜ್ಯ ನೋಡೆಲ್ ಏಜನ್ಸಿಗಳಿಗೆ ಯುಜಿಸಿ ಯಿಂದ ಮಾನ್ಯತೆ ಅಗತ್ಯವಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಅನುಮತಿ ನೀಡಿರುತ್ತದೆ. ಆದರೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಜುಲೈ-2021 ರಲ್ಲಿ ನಡೆದ ಕೆ-ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಹಾಗೂ ಇತರರು ಸಂಪೂರ್ಣ ಹೊಣೆಗಾರರೆಂದು ದೂರುಗಳು ಬಂದಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ಮಾತನಾಡಿ, ಪರೀಕ್ಷೆ ನಡೆಯಲು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಅನುಮತಿಗಾಗಿ ಕಾಯಲಾಗುತ್ತಿದೆ. ಆಗಸ್ಟ್ನಲ್ಲಿ ಪರೀಕ್ಷೆಯನ್ನು ನಡೆಸಲು ಚಿಂತನೆ ನಡೆಸಿದ್ದೆವು. ಆದರೆ, ಯುಜಿಸಿಯಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಹೀಗಾಗಿ ಸೆಪ್ಟೆಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.