ಬೆಂಗಳೂರು : ಕೇಂದ್ರದ ಕೃಷಿ ನೀತಿ ವಿರುದ್ಧ ರೈತರ ಪ್ರತಿಭಟನೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ ಕರ್ನಾಟಕದ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗುತ್ತಿರುವ ಹಿನ್ನೆಲೆ ರೈತರು ವಿಧಾನಸೌಧ ತಲುಪಲು ಸಿದ್ಧರಾಗಿದ್ದಾರೆ.
ಬೆಳಗ್ಗೆ11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ತದನಂತರ ವಿಧಾನಸೌಧಕ್ಕೆ ಬರಲಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ. ಇಂದಿನ ಅಧಿವೇಶನದಲ್ಲಿ ಕೃಷಿ ಕಾಯ್ದೆ ವಾಪಾಸ್ ಪಡೆಯಬೇಕೆಂಬುದು ರೈತರ ಬೇಡಿಕೆಯಾಗಿದೆ.