ನವದೆಹಲಿ, ;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು.
ಕೋವಿಡ್ ಸಾಂಕ್ರಾಮಿದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಆದರೆ ರಾಜ್ಯಗಳ ಹಣಕಾಸು ಸ್ಥಿತಿ ಸುಧಾರಿಸುವವರೆಗೆ ಕೇಂದ್ರದ ನೆರವು ಅತಿ ಅಗತ್ಯವಾಗಿದ್ದು ಮೂರು ವರ್ಷಗಳ ಅವಧಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವಂತೆ ಮನವಿ ಮಾಡಿದರು.
15ನೆ ಹಣಕಾಸು ಆಯೋಗವು 2021 ರಿಂದ 2026ರ ಅವಧಿಗೆ ರಾಜ್ಯಗಳಿಗೆ ತೆರಿಗೆ ಹಂಚಿಕೆಗೆ ಮಾಡಿದ ಶಿಫಾರಸಿನ ಅನ್ವಯ ರಾಜ್ಯದ ಹಂಚಿಕೆ 14 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ಶೇ.4.71 ರಿಂದ ಶೇ. 3.647 ಕ್ಕೆ ಇಳಿಕೆಯಾಗಿದೆ. ಇದರಿಂದ ಅನುದಾನ ಹಂಚಿಕೆಯಲ್ಲಿ ತೀವ್ರ ಇಳಿಕೆಯಾಗಿದೆ. ಅನುದಾನ ಹಂಚಿಕೆ ಕುರಿತ ಮಾನದಂಡಗಳನ್ನು ಬದಲಿಸುವಂತೆ ರಾಜ್ಯ ಸರ್ಕಾರವು 15ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದು ರಾಜ್ಯದ ಮನವಿಯನ್ನು ಆಯೋಗವು ಪರಿಗಣಿಸಿಲ್ಲ. ಇದರಿಂದಾಗಿ ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಬೊಮ್ಮಾಯಿ ವಿವರಿಸಿದರು.