ಬೆಂಗಳೂರು: ಬಂದೂಕು ಪರವಾನಗಿ ಪಡೆಯುವುದರಿಂದ ಕೊಡವರು ಮತ್ತು ಜುಮ್ಮಾಬಾಣೆ ಭೂಮಿ ಹೊಂದಿರುವವರಿಗೆ ಕೇಂದ್ರ ಸರ್ಕಾರ ವಿನಾಯಿತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಕೊಡವರನ್ನು 1890ರಿಂದ ಮಾರ್ಷಲ್ ಜನಾಂಗದವರೆಂದು ಪರಿಗಣಿಸಲಾಗಿದೆ. ಆಗಿನಿಂದಲೂ ಬಂದೂಕು ಪರವಾನಗಿ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಶಸ್ತ್ರಾಸ್ತ ಕಾಯ್ದೆ-1959ರ ಸೆಕ್ಷನ್ 41 ಅನುಸಾರ ಕೊಡವರಿಗೆ ಹಾಗೂ ಜಮ್ಮಾ ಬಾಣೆ ಭೂಮಿ ಹೊಂದಿರುವವರಿಗೆ 10 ವರ್ಷಗಳ ಅವಧಿಗೆ ಬಂದೂಕು ಪರವಾನಗಿ ವಿನಾಯಿತಿ ನೀಡಿ ಕೇಂದ್ರ ಸರ್ಕಾರ 2019ರ ಅ.29ರಂದು ಅಧಿಸೂಚನೆ ಹೊರಡಿಸಿದೆ. ಅನೇಕ ಷರತ್ತು ವಿಧಿಸಿಯೇ ವಿನಾಯಿತಿ ನೀಡಲಾಗಿದೆ. ಆದ್ದರಿಂದ, ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯ ಕಂಡುಬರುತ್ತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.