ಬೆಂಗಳೂರು: ಕೋವಿಡ್ನಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು.
ಬೆಲೆ ಏರಿಕೆ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಈವರೆಗೆ ಒಟ್ಟು 7 ರಿಂದ 8 ಸಾವಿರ ಬಿಪಿಎಲ್ ಕುಟುಂಬ ಗಳು ನೋಂದಣಿ ಮಾಡಿವೆ. ನೇರವಾಗಿ ಅವರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಹೇಳಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ವಿಷಯ ಪ್ರಸ್ತಾಪಿಸಿ, ಮೃತಪಟ್ಟ ವರಿಗೆ ತಲಾ ₹1 ಲಕ್ಷ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಆದರೆ, ಈವರೆಗೂ ಪರಿಹಾರ ಮೊತ್ತವನ್ನು ನೀಡಿಲ್ಲ ಎಂದರು.
ಕೋವಿಡ್ 2ನೇ ಅಲೆ ಕೊನೆ ಹಂತಕ್ಕೆ ಬಂದಿದೆ. ಮೂರನೇ ಅಲೆಯ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಶಾಲೆ ಯನ್ನು ಹಂತ ಹಂತವಾಗಿ ಆರಂಭಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಆರ್ಥಿಕ ಚಟುವಟಿಕೆಗೆ ಚುರುಕು ನೀಡಬೇಕಾಗಿದೆ ಎಂದು ಬೊಮ್ಮಾಯಿ ಹೇಳಿದರು.