ಬೆಂಗಳೂರು:ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವ ಶಾಸಕರು, ಅಧಿಕಾರಿ ಸಿಬ್ಬಂದಿಗೆ ಕೋವಿಡ್-19ರ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಅಧಿವೇಶನದ ಸಂದರ್ಭದಲ್ಲಿ ಉಭಯ ಸದನಗಳ ಸಭಾಂಗಣಗಳನ್ನು ಪ್ರತಿದಿನ ಸ್ಯಾನಿಟೈಜರ್ ಮೂಲಕ ಸ್ವಚ್ಛಗೊಳಿಸಲಾಗುತ್ತದೆ. ಸ್ಯಾನಿಟೈಜರ್ ಬಳಕೆ, ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಮಧುಮೇಹ, ಅಧಿಕ ರಕ್ತದೊತ್ತಡ, ಕಿಡ್ನಿ, ಲಿವರ್, ಹೃದ್ರೋಗ ಸಮಸ್ಯೆ ಇದ್ದವರು ಮುಖಗವಸಿನ ಜತೆಗೆ ಫೇಸ್ಮಾಸ್ಕ್ ಬಳಸುವಂತೆ ಸೂಚಿಸಲಾಗಿದೆ.
ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನದಲ್ಲಿ ಭಾಗವಹಿಸುವವರು ಡಿ.10ರ ನಂತರ ಕೋವಿಡ್ ನೆಗೆಟಿವ್ ವರದಿ ಪಡೆದಿರಬೇಕು.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಭಯ ಸದನಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆರೋಗ್ಯ ಇಲಾಖೆಯ ಪತ್ರದ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವಿಧಾನಸಭೆ ಸಚಿವಾಲಯವು ಶಾಸಕರನ್ನು ಕೋರಿದೆ.
ಅಧಿವೇಶನದಲ್ಲಿ ಪಾಲ್ಗೊಳ್ಳುವವರೆಲ್ಲರೂ ಕಡ್ಡಾಯವಾಗಿ ಕೋವಿಡ್ನ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂಬ ಷರತ್ತು ವಿಧಿಸಲಾಗಿದೆ. ಮೂಗು ಮತ್ತು ಬಾಯಿ ಮುಚ್ಚುವಂತಹ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವಂತೆ ಮನವಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಚಿವಾಲಯವು ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆರ್ಟಿಪಿಸಿಆರ್ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿತ್ತು. ಸಚಿವಾಲಯದ ಎಲ್ಲ ಅಧಿಕಾರಿ, ನೌಕರರಿಗೆ ಇಂದಿನಿಂದ ಡಿ.12ರ ವರೆಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ.