ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಶನಿವಾರ 4800 ಕೋಟಿ ರೂಪಾಯಿ ಮೊತ್ತದ ಬಂಡವಾಳ ಹೂಡಿಕೆಯ ಒಡಂಬಡಿಕೆ ಪತ್ರಕ್ಕೆ ಕರ್ನಾಟಕ ಸರ್ಕಾರ ಮತ್ತು ಟೊಯೋಟಾ ಕಿರ್ಲೋಸ್ಕರ್ ಕಂಪನಿ ನಡುವೆ ಸಹಿ ಹಾಕಲಾಯಿತು.
ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕಿ ಗುಂಜನ್ ಕೃಷ್ಣಾ ಮತ್ತು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಮತ್ತು ನಿರ್ದೇಶಕರಾದ ಸುದೀಪ್ ದಳವಿ ಹಾಗೂ ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ವ್ಯವಸ್ಥಾಪಕ ನಿರ್ದೇಶಕ ಕೆಎಂ ಪ್ರಸಾದ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿಕ್ರಂ ಕಿರ್ಲೋಸ್ಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮತ್ತು ಇತರರು ಉಪಸ್ಥಿತರಿದ್ದರು.