ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾವಣೆಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಪಿ.ರವೀಂದ್ರನಾಥ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್ಇ) ಹೆಚ್ಚುವರಿ ಡಿಜಿಪಿ ಅರುಣ್ ಚಕ್ರವರ್ತಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಂತರ ರವೀಂದ್ರನಾಥ್ ಅವರು ಅರಮನೆ ರಸ್ತೆಯಲ್ಲಿರುವ ತಮ್ಮ ಕಚೇರಿಯಿಂದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮುಖ್ಯಸ್ಥರ ಕಚೇರಿಗೆ ತೆರಳಿ, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿದರು ಎಂದು ತಿಳಿದುಬಂದಿದೆ.
ಈ ಕುರಿತು ರವೀಂದ್ರನಾಥ್ ಅವರು ಸ್ಪಷ್ಟನೆ ನೀಡಿದ್ದು, ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಮಂಗಳವಾರ ಬೆಳಿಗ್ಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಸರ್ಕಾರದ ಮೇಲೆ ಪ್ರಭಾವ ಬೀರುವ ಕೆಲವು ವ್ಯಕ್ತಿಗಳು ನನ್ನನ್ನು ಗುರಿಯಾಗಿರಿಸಿಕೊಂಡಿದ್ದಾರೆ. “ನಾನು ಸರ್ಕಾರದ ವಿರುದ್ಧ ಇಲ್ಲ. ವರ್ಗಾವಣೆ ನನ್ನ ಕೋರಿಕೆಯಾಗಿರಲಿಲ್ಲ. ಸಾರ್ವಜನಿಕರ ಹಿತಾಸಕ್ತಿಗಾಗಿಯೂ ವರ್ಗಾವಣೆ ಮಾಡಿಲ್ಲ. ನನ್ನ ವಿರುದ್ಧ ಪಿತೂರಿ ನಡೆಸಿ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ನಾನು ಕೆಲವು ಪ್ರಭಾವಿ ವ್ಯಕ್ತಿಗಳ ಹೆಸರು ಬಹಿರಂಗಪಡಿಸಿದ್ದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಅಧಿಕಾರಿಯ ಮುಂದೆ ಹಾಜರಾಗುವಂತೆ ಅವರಿಗೆ ನೋಟಿಸ್ಗಳನ್ನು ನೀಡಲಾಗಿತ್ತು. ಅಲ್ಲಿ ನಾನು ಒಂದೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೆ. ಪತ್ರಿಕಾಗೋಷ್ಠಿ ನಡೆಸಿದ ಬಳಿಕ ನನ್ನನ್ನು ಗುರಿ ಮಾಡಲಾಗುತ್ತಿದೆ. ಸರ್ಕಾರವು ನಿಯಮಾವಳಿಗಳನ್ನು ಉಲ್ಲಂಘಿಸಿ ನನ್ನನ್ನು ವರ್ಗಾವಣೆ ಮಾಡಿದೆ ಎಂದಿದ್ದಾರೆ.
ನಿಜವಾದ ಎಸ್ಸಿ/ಎಸ್ಟಿ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ಡಿಸಿಆರ್ಇಯಲ್ಲಿ ಇನ್ನೂ ಕೆಲವು ದಿನ ಕೆಲಸ ಮಾಡುವ ಆಸೆಯಿದೆ. “ಎಸ್ಸಿ/ಎಸ್ಟಿ ಕೋಟಾದ ಮೂಲಕ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ನಕಲಿ ಪ್ರಮಾಣಪತ್ರಗಳನ್ನು ಪಡೆದಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾನು ಬಯಸುತ್ತೇನೆ. ನಾನು ಪ್ರಾಮಾಣಿಕವಾಗಿ ಮತ್ತು ಪಕ್ಷಪಾತವಿಲ್ಲದೆ ಕೆಲಸ ಮಾಡುತ್ತಿದ್ದೇನೆಂದು ಹೇಳಿದ್ದಾರೆ.