ಬೆಂಗಳೂರು: ಹಿಂದೂ ದೇವಸ್ಥಾನಗಳ ಅರ್ಚಕರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಿಸುವ ಕುರಿತು ಶೀಘ್ರ ತೀರ್ಮಾನಿಸಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದರು.
ರಾಜ್ಯ ಮುಜರಾಯಿ ದೇವಸ್ಥಾನಗಳ ಅರ್ಚಕರ, ಆಗಮಿಕರ ಮತ್ತು ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ 100ಕ್ಕೂ ಹೆಚ್ಚು ಅರ್ಚಕರ ನಿಯೋಗದ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದೇವಸ್ಥಾನಗಳ ರಕ್ಷಣೆ ಹಾಗೂ ಅರ್ಚಕರ ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದರು.
ಅರ್ಚಕರಿಗೆ ಕ್ಯಾನ್ಸರ್, ಹೃದಯ ಸಂಬಂಧಿ ಆರೋಗ್ಯದ ಸಮಸ್ಯೆ ಎದುರಾದಾಗ ಆರ್ಥಿಕ ನೆರವು ನೀಡಲು ವಿಮೆ ಜಾರಿಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಜೊತೆಗೆ, ತಸ್ತಿಕ್ ಹಣ ಪಡೆಯಲು ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.