ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಮೇ 11ರಿಂದ ರಾತ್ರಿಯಿಂದ ಮಳೆ ಸುರಿಯುತ್ತಿದೆ.
ತುಂತುರು ಮಳೆಯಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕರ್ತವ್ಯಕ್ಕೆ ಕಚೇರಿಗೆ ತೆರಳಲು ಉದ್ಯೋಗಿಗಳು ಪರದಾಡುತ್ತಿದ್ದಾರೆ. ವಿಧಾನಸೌಧ, ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ. ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.
ಮೈಸೂರಿನಲ್ಲೂ ವರುಣನ ಆರ್ಭಟ ಮುಂದುವರಿದಿದೆ. ನಾಗಮಂಗಲ, ಅತ್ತಿಕುಪ್ಪೆ ಗ್ರಾಮದಲ್ಲಿ ತಂಬಾಕು ಸಸಿಗಳು ಜಲಾವೃತವಾಗಿವೆ. ಸಾಲಸೋಲಮಾಡಿ ಬೆಳೆದಿದ್ದ ತಂಬಾಕು ಬೆಳೆ ಸಂಪೂರ್ಣ ಜಲಾವೃತವಾದ ಹಿನ್ನೆಲೆ ಸೂಕ್ತ ಪರಿಹಾರ ನೀಡುವಂತೆ ಬೆಳೆಗಾರರು ಒತ್ತಾಯಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ. ನಿರಂತರ ಸುರಿದ ಮಳೆಗೆ ಕೆಲವೆಡೆ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ದಾವಣಗೆರೆ ನಗರದ ರೈಲ್ವೆ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿದೆ.