ಬೆಂಗಳೂರು, – ಸಂಭಾವ್ಯ ಕೋವಿಡ್ ಮೂರನೇ ಅಲೆಯ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರದಿಂದ ಬಿಬಿಎಂಪಿ ಹಿಂದೆ ಸರಿದಿದೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಪ್ರತಿ ದಿನವೂ ಬರೋಬ್ಬರಿ ೬೦ ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಈ ಪೈಕಿ ೪೦೦ರೊಳಗೆ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಒಟ್ಟಾರೆ ಪಾಸಿಟಿವ್ ಪ್ರಮಾಣ ಶೇಕಡಾ ೧.೭ ಹಾಗೂ ೧.೬ರಷ್ಟಿದೆ. ಹಾಗಾಗಿ, ಕೋವಿಡ್ ಪರಿಸ್ಥಿತಿ ಸದ್ಯಕ್ಕೆ ಹತೋಟಿಯಲ್ಲಿದ್ದು, ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನೇ ಪಾಲನೆ ಮಾಡಬೇಕಾಗಿದೆ ಎಂದು ತಿಳಿಸಿದರು.ಯಾವ ಭಾಗದಲ್ಲಿ ಪಾಸಿಟಿವ್ ಪ್ರಮಾಣ ಶೇಕಡಾ ೨ಕ್ಕಿಂತ ಅಧಿಕವಾಗಿದೆಯೋ, ಅಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಅವರು, ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳ ಕುರಿತು ನಿಗಾವಹಿಸಿದ್ದು, ಅಗತ್ಯ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಪಾಲಿಕೆ ಮುಂದುವರೆಸಿದೆ ಎಂದು ತಿಳಿಸಿದರು. ಕಳೆದ ನಾಲ್ಕೈದು ತಿಂಗಳಿನಿಂದ ಬೆಂಗಳೂರಿನಲ್ಲಿ ಕೋವಿಡ್ ರೂಪಾಂತರ ಡೆಲ್ಟಾ ಸೋಂಕು ಮಾತ್ರ ಶೇಕಡಾ ೭೦ ರಷ್ಟು ಕಾಣಿಸಿಕೊಂಡಿದೆ. ಈ ಬಗ್ಗೆ ಕೆಲವರ ಪರೀಕ್ಷೆಯನ್ನು ಮುಂದುವರೆಸಲಾಗಿದೆ ಎಂದು ಅವರು ಹೇಳಿದರು.
ಪರೀಕ್ಷೆ ಕಡ್ಡಾಯ: ಇದೇ ತಿಂಗಳ ೨೩ರಿಂದ ಶಾಲಾ, ಕಾಲೇಜು ಪುನರಾರಂಭಗೊಳ್ಳುತ್ತಿರುವ ಹಿನ್ನೆಲೆ ಹೊರ ರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗಟಿವ್ ಪ್ರಮಾಣ ಪತ್ರ ಹೊಂದಿರಬೇಕು. ಇನ್ನು, ಇತ್ತೀಚಿಗೆ ಹತ್ತು ಸಾವಿರ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಒಂದೂ ಸಹ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿಲ್ಲ ಎಂದರು.
ನಗರದ ಹೊರವಲಯದ ವಾರ್ಡ್ ವ್ಯಾಪ್ತಿಯಲ್ಲಿ ಕೊಂಚ ಮಟ್ಟಿಗೆ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೌರವ್ ಗುಪ್ತ ನುಡಿದರು.