ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಮೂರು ದಿನಗಳಿಗೆ ಸೀಮಿತವಾಗಿ ಮಾತ್ರ ಆಚರಿಸಬಹುದು ಎಂದು ಬಿಬಿಎಂಪಿಯು ಆದೇಶ ಮಾಡಿದ್ದರೂ, ಕೆಲವೆಡೆ ಅದರ ನಂತರವೂ ಗಣೇಶೋತ್ಸವ ಮುಂದುವರಿದಿದೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಬಾರದು ಎಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯು ಪಾಲಿಕೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತ್ತು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕ ಗಣೇಶೋತ್ಸವಕ್ಕೆ ಐದು ದಿನ ಅವಕಾಶ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಬಹುದು ಎಂದು ಬಿಬಿಎಂಪಿ ನಿಲುವು ಬದಲಾಯಿಸಿತ್ತು. ವಾರ್ಡ್ಗೆ ಒಂದೇ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವ ನಿರ್ಬಂಧವನ್ನೂ ಸಡಿಲಿಸಿತ್ತು.
ನಗರದಲ್ಲಿ ಭಾನುವಾರ 72,068 ವಿಗ್ರಹಗಳನ್ನು ವಿಸರ್ಜಿಸಲಾಗಿದೆ. ಮೂರು ದಿನಗಳಲ್ಲಿ ಒಟ್ಟು 1.87 ಲಕ್ಷ ಗಣೇಶ ವಿಗ್ರಹಗಳನ್ನು ಬಿಬಿಎಂಪಿ ನಿರ್ಮಿಸಿದ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲಾಗಿದೆ.
ಈ ಹಿಂದೆ 40ಕ್ಕೂ ಅಧಿಕ ಕೆರೆಗಳಲ್ಲಿ ಗಣೇಶ ವಿಸರ್ಜನೆಗೆ ಅನುಮತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ 12 ಕೆರೆಗಳ ಕಲ್ಯಾಣಿಗಳಲ್ಲಿ ಮಾತ್ರ ಸಾರ್ವಜನಿಕ ಗಣೇಶ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ.