ಬೆಂಗಳೂರು, ; ಖಾಯಂ ಉದ್ಯೋಗ ಸೇರಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ “ಸ್ವಾತಂತ್ರ್ಯ ದಿನಾಚರಣೆ” ಬಹಿಷ್ಕರಿಸಿ ಸ್ವಚ್ಛತಾ ಕಾರ್ಯವನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಬಿಎಂಪಿಗೆ ಪೌರಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದ ಬಿಬಿಎಂಪಿಯ ಪೌರಕಾರ್ಮಿಕರು, ಹಲವು ವರ್ಷಗಳಿಂದ ದುಡಿಯುತ್ತಿರುವ 18,600 ಮಂದಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಇಲ್ಲದಿದ್ದರೆ, ಆ.15ರಿಂದ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಿ ಕಸ ವಿಲೇವಾರಿ ಕಾರ್ಯ ನಿಲ್ಲಿಸಲಾಗುವುದು ಎಂದು ಹೇಳಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್.ಮುತ್ಯಾಲಪ್ಪ, ಪಾಲಿಕೆಯು ಈ ಹಿಂದೆ ಕೇವಲ 4 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಅಧಿಸೂಚನೆ ಹೊರಡಿಸಿದೆ.ಅದೇ ರೀತಿ, 18,600 ಮಂದಿಯನ್ನು ಖಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು.ಇದು ಆಗದಿದ್ದರೆ, ಸಮಾನ ಕೆಲಸಕ್ಕೆ ಸಮಾನ ವೇತನ ಆದರೂ ನೀಡಬೇಕು ಎಂದು ಒತ್ತಾಯ ಮಾಡಿದರು.