ಬೆಂಗಳೂರು: ದೇಶದಲ್ಲಿ ಪ್ರತಿ ನಾಲ್ಕು ನಿಮಿಷಗಳಿಗೆ ಕನಿಷ್ಠ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಕೋವಿಡ್ ಕಾಣಿಸಿಕೊಂಡ ಬಳಿಕ ಯುವಜನತೆ ಹೆಚ್ಚಾಗಿ ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ತಿಳಿಸಿದೆ.
ವಿಶ್ವ ಆತ್ಮಹತ್ಯೆ ತಡೆದಿನದ ಪ್ರಯುಕ್ತ ಸಂಸ್ಥೆಯು ಸೆಪ್ಟೆಂಬರ್ ತಿಂಗಳು ಪೂರ್ತಿ ಮಾನಸಿಕ ಆರೋಗ್ಯ ಮತ್ತು ಶಿಕ್ಷಣದ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ.
ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಮೂರನೇ ಒಂದರಷ್ಟು ಮಂದಿ ಮಾತ್ರ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಉಳಿದ ಎರಡು ಭಾಗದಷ್ಟು ಮಂದಿ ಆರ್ಥಿಕ ಸಮಸ್ಯೆ ಹಾಗೂ ಕುಟುಂಬದ ಬಾಂಧವ್ಯ ಕಡಿದುಕೊಳ್ಳುವಿಕೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ಪರಿಸರ ಮಾಲಿನ್ಯ, ಶಬ್ದ ಮಾಲಿನ್ಯ ಕೂಡಾ ಮಾನಸಿಕ ಸಮಸ್ಯೆಗೆ ಕಾರಣವಾಗುತ್ತಿದೆ. ಬಹುತೇಕ ಎಲ್ಲ ಮಾನಸಿಕ ಕಾಯಿಲೆಗಳನ್ನು ಗುಣಪಡಿಸಬಹುದಾಗಿದೆ. ಮನಸ್ಸಿನ ನಿಗ್ರಹವಿಟ್ಟುಕೊಂಡಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳಬಹುದು ಎಂದು ನಿಮ್ಹಾನ್ಸ್ ವೈದ್ಯರು ತಿಳಿಸಿದ್ದಾರೆ.