ಭಾರತದಲ್ಲಿ ಅತ್ಯಂತ ಪುರಾತನವಾದ ಭಾಷೆ ಕನ್ನಡ. ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನ ಸಿಗಬೇಕು. ಭಾಷೆ ಸದೃಢವಾದರೆ ರಾಜ್ಯ ಶಕ್ತಿಶಾಲಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವವನ್ನು ಪ್ರತಿಯೊಬ್ಬರೂ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು. ಕನ್ನಡಕ್ಕೆ ನಮ್ಮೆಲ್ಲರನ್ನು ಒಂದು ಗೂಡಿಸುವ ಶಕ್ತಿ ಇದೆ. ಭಾಷೆ ಸದೃಢವಾದರೆ ರಾಜ್ಯ ಶಕ್ತಿಶಾಲಿಯಾಗುತ್ತದೆ ಎಂದರು.
ರಾಜ್ಯದ ಯಾವುದೇ ಪ್ರದೇಶವನ್ನೂ ಹಿಂದುಳಿಯಲು ಬಿಡುವುದಿಲ್ಲ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಯೋಜನೆ ರೂಪಿಸುತ್ತೇವೆ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಬೇಕು. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು ಎಂದು ಕರೆ ನೀಡಿದರು.
ಕನ್ನಡ ಬರದವರಿಗೆ ಕನ್ನಡ ಭಾಷೆಯನ್ನು ಕಲಿಸಬೇಕು. ಕನ್ನಡಿಗರಿಗೆ ಕೆಲಸ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ, ಕನ್ನಡ ಅಭಿವೃದ್ಧಿಯಾಗುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಕನ್ನಡ ಮಾಧ್ಯಮದಲ್ಲಿ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿದೆ. ಇದು ನಮ್ಮ ಸರ್ಕಾರ ಮಾಡಿದೆ ಎಂಬ ಹೆಮ್ಮೆಯಿದೆ ಎಂದು ಹೇಳಿದರು.