ಕುಶಾಲನಗರ: ಮಳೆಯಿಂದಾಗಿ ಬೆಳೆ ಹಾನಿಯಾದ ಕುಶಾಲನಗರದ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ ಅವರು ಸೋಮವಾರ ಅಪರಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾರೂರು ಗ್ರಾಮದ ಪ್ರಕಾಶ್ ಎಂಬವರಿಗೆ ಸೇರಿದ ಎರಡು ಎಕರೆಗಳಷ್ಟು ಪ್ರದೇಶದಲ್ಲಿ ಮಳೆಯಿಂದಾಗಿ ಜೋಳದ ಬೆಳೆ ಹಾಳಾಗಿದ್ದನ್ನು ಖುದ್ದಾಗಿ ವೀಕ್ಷಿಸಿದ ಸಚಿವರು, ನಂತರ ಚಿನ್ನೇನಹಳ್ಳಿಯ ಕುಮಾರ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಮಳೆಯಿಂದಾಗಿ ಶುಂಠಿ ಬೆಳೆಗೆ ಕೂಳೆ ರೋಗ ಬಂದಿರುವುದನ್ನು ಪರಿಶೀಲನೆ ನಡೆಸಿದರು
ಜೋಳ ಮತ್ತು ಶುಂಠಿ ಬೆಳೆ ಹಾಳಾಗಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಬೆಳೆ ನಷ್ಟವಾದ ರೈತರಿಗೆ 15 ದಿನಗಳ ಒಳಗೆ ಪರಿಹಾರ ನೀಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಥಳದಲ್ಲಿದ್ದ ರೈತರಿಗೆ ತಿಳಿಸಿದರು. ನಂತರ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ, ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಂದ ಸಮರ್ಪಕವಾದ ಮಾಹಿತಿಯನ್ನು ಪಡೆದರು.
ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಚುನಾವಣಾ ಆಯೋಗದ ಅನುಮತಿ ಮೇರೆಗೆ ಇಂದು ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜೋಳ, ಶುಂಠಿ, ಕಾಫಿ ಬೆಳೆಗಳು ಹಾಳಾಗಿದ್ದು , ಆ ಸ್ಧಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದು, ಅವರ ಜಾಗದಿಂದಲೇ ಆಪ್ ಲೋಡ್ ಮಾಡಿ ಬೆಳೆ ಹಾನಿಯಾದಷ್ಟು ಪರಿಹಾರವನ್ನು 15 ದಿನಗಳ ಒಳಗೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ಖಾತೆಯಲ್ಲಿ 7ಕೋಟಿಯಷ್ಟು ಹಣ ಇದ್ದು, ಅದನ್ನು ಬಳಕೆ ಮಾಡುವ ಮೂಲಕ ರೈತರಿಗೆ ಪರಿಹಾರವನ್ನು ನೀಡಲಾಗುವುದು. ಅಲ್ಲದೆ ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಮೊದಲ ಹಂತವಾಗಿ ಒಂದು ಲಕ್ಷದಷ್ಟು ಹಣವನ್ನು ನೀಡಲಾಗುವುದು ನಂತರ ಸಂಪೂರ್ಣ ಮಾಹಿತಿ ಅಧಾರದ ಮೇಲೆ ಮೂರು ಲಕ್ಷದವರೆಗೆ ಪರಿಹಾರವನ್ನು ನೀಡಲಾಗುವುದು ಎಂದರು.
ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಳೆ ಹಾನಿಯ ಹೊರತು ಬೇರೆ ಯಾವ ವಿಷಯದ ಬಗ್ಗೆಯೂ ಸಚಿವ ಅಶೋಕ್ ಮಾತನಾಡಲು ನಿರಾಕರಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಸತೀಶ್, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಸೋಮವಾರಪೇಟೆ ತಾಲೂಕು ತಹಶೀಲ್ದಾರ ಗೋವಿಂದರಾಜ್, ಕುಶಾಲನಗರ ತಾಲೂಕು ತಹಶೀಲ್ದಾರ ಪ್ರಕಾಶ್, ಉಪ ತಹಶೀಲ್ದಾರ ಮಧುಸೂದನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾ ಶ್ರೀನಿವಾಸ, ಮಂಜುಳಾ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ಭಾಸ್ಕರ್ ನಾಯಕ್, ಜಯಮ್ಮ, ಮಂಜುನಾಥ, ಪ್ರವೀಣ್, ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.