ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ನಾಳೆ ಬಿಳಿಗಿರಿ ರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆ ಭಾರತೀಯ ವಾಯುಸೇನೆಯ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಯಳಂದೂರು ತಾಲ್ಲೂಕಿನ ವಡಗೆರೆ ಹಾಗೂ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ಗಳನ್ನು ಪರಿಶೀಲಿಸಿದರು. ರಾಷ್ಟ್ರಪತಿ ಕೋವಿಂದ್ ಚಾಮರಾಜನಗರ, ಮಂಗಳೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಚಾಮರಾಜನಗರದಲ್ಲಿ ಅಕ್ಟೋಬರ್ 7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿ ರಂಗನ ಬೆಟ್ಟ, ಚಾಮರಾಜನಗರ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. 15 ಕಿ. ಮೀ. ವ್ಯಾಪ್ತಿಯಲ್ಲಿ ಏರ್ ಬಲೂನ್ ಹಾರಾಟ, ಬ್ಯಾನರ್, ಮಾನವ ರಹಿತ ಏರ್ ಕ್ರಾಫ್ಟ್ ಬಳಕೆ, ಬಂಟಿಂಗ್ಸ್ ಹಾಕುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಬಿಳಿಗಿರಿ ರಂಗನ ಬೆಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರಾಷ್ಟ್ರಪತಿಗಳ ಜೊತೆ ಪಾಲ್ಗೊಳ್ಳಲಿದ್ದು, ರಾಷ್ಟ್ರಪತಿಯವರನ್ನು ಸ್ವಾಗತಿಸಲಿದ್ದಾರೆ.