ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ. 77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು.
ಈ ಸಲ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಲಭ್ಯತೆಯಿಂದಾಗಿ ಬೇಡಿಕೆ ಹಾಗೂ ದರ ಕಡಿಮೆಯಾಗಿರುವುದರಿಂದ ಈ ಬಾರಿ ರೈತರು ಉತ್ತಮ ಫಸಲು ಪಡೆಯುವ ನಿರೀಕ್ಷೆ ಹೊಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
1990ರ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 70 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಮಧ್ಯದ ವರ್ಷದಲ್ಲಿ ಮಳೆ ಕೊರತೆಯಿಂದಾಗಿ 50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿತ್ತು. ಆಗಸ್ಟ್ 21 ರವರೆಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಮಳೆಯಾಶ್ರಿತ 54. 52 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಶೇ. 96. 49 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 68. 66 ರಷ್ಟು ಬಿತ್ತನೆಯಾಗಿತ್ತು. ಇದು ಅತ್ಯುತ್ತಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.