ಬೆಂಗಳೂರು : ರಾಜ್ಯದಲ್ಲಿನ ಚರ್ಚ್ ಗಳ ಸರ್ವೆ ಕಾರ್ಯಕ್ಕೆ ಮುಂದಾದಂತ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ, ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.
ಇಂದು ಪಿಯುಸಿಎಲ್ ಸಂಸ್ಥೆಯು ರಾಜ್ಯ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಚರ್ಚ್ ಗಳ ಸರ್ವೆ ಸಂಬಂಧದ ಕುರಿತಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿತು. ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿ, ರಾಜ್ಯ ಸರ್ಕಾರದ ಚರ್ಚೆ ಸರ್ವೆಯಿಂದ ಖಾಸಗಿತನದ ಹಕ್ಕು ಉಲ್ಲಂಘನೆಯಾಗಲಿದೆ ಎಂದು ವಾದ ಮಂಡಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಪೀಠವು ಸರ್ಕಾರ ಅಭಿವೃದ್ಧಿ ಕಾರ್ಯಕ್ಕಾಗಿ ಅಂಕಿ ಅಂಶ ಸಂಗ್ರಹಿಸೋದಕ್ಕೆ ಸರ್ವೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಇದರಿಂದ ಅಲ್ಪ ಸಂಖ್ಯಾತರ ಯಾವ ಹಕ್ಕು ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರಿಗೆ ಪ್ರಶ್ನಿಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ಶಾಸಕರೊಬ್ಬರ ಮನವಿಯಂತೆ ಅಂಕಿ ಅಂಶಗಳನ್ನು ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಮತಾಂತರದ ಕಾರಣ ನೀಡಿ ಸರ್ವೆ ಮಾಡಲಾಗುತ್ತಿದೆ. ಇದರಿಂದ ಖಾಸಗಿತನದ ಹಕ್ಕು ಉಲ್ಲಂಘನೆಯಾಗಲಿದೆ ಎಂದು ನ್ಯಾಯಪೀಠಕ್ಕೆ ಮನವರಿಗೆ ಮಾಡಿಕೊಟ್ಟರು. ಈ ಬಳಿಕ ನ್ಯಾಯಪೀಠವು ಚರ್ಚ್ ಗಳ ಸರ್ವೆ ಆದೇಶಕ್ಕೆ ಸದ್ಯಕ್ಕೆ ತಡೆ ಇಲ್ಲ ಎಂದು ಅಭಿಪ್ರಾಯ ಪಟ್ಟು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು 3 ವಾರಗಳ ಕಾಲಾವಕಾಶ ನೀಡಿದೆ.