ಬೆಂಗಳೂರು : ಕೊರೋನಾ ಹರಡುವುದನ್ನು ತಡೆಗಟ್ಟಲು ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂದರ್ಶಕರು ಅಗತ್ಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು, ರಾಜ್ಯದಲ್ಲಿ ದೈನಂದಿನ ಕೋವಿಡ್-19 ಪ್ರಕರಣಗಳಲ್ಲಿ ಇಳಿಕೆಯನ್ನು ಗಮನಿಸಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಯಶಸ್ಸನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂದರ್ಶಕರು ಅಗತ್ಯ ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆ ಮಾಡುವುದು ಅನಿವಾರ್ಯವಾಗಿರುತ್ತದೆ. ಈ ಸಂಬಂಧ ಆದೇಶಗಳನ್ನು ಈಗಾಗಲೇ ಹೊರಡಿಸಲಾಗಿದೆ.
ಈ ಹಿನ್ನಲೆಯಲ್ಲಿ, ಪ್ರತಿ ಕಚೇರಿಯ ಕರ್ತವ್ಯದ ಅವಧಿಯಲ್ಲಿ ಎಲ್ಲಾ ಸಿಬ್ಬಂದಿ ಹಾಗೂ ಸಂದರ್ಶಕರು ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಖಚಿತಪಡಿಸಿಕೊಳ್ಳುವಂತೆ ಕ್ರಮವಹಿಸಲು ಒಬ್ಬ ನೋಡಲ್ ಅಧಿಕಾರಿಯನ್ನು ( ಆಯಾ ಕಚೇರಿಯ ಒಬ್ಬ ಅಧಿಕಾರಿ) ಗುರುತಿಸಿವುದು.
ಸೂಕ್ತ ಮಾಹಿತಿಯ ಹೊರತಾಗಿಯೂ ಕಚೇರಿಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಲ್ಲಿ ಗಂಭೀರ ಹಾಗೂ ಪದೇ ಪದೇ ಉಲ್ಲಂಘನೆ ಕಂಡು ಬಂದ ಪಕ್ಷದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.